ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಕಿಸಾನ್ ರೈಲು ಆರಂಭಿಸುವ ಬಗ್ಗೆ ಪರಿಶೀಲನೆ: ಸಚಿವ ಸುರೇಶ್ ಅಂಗಡಿ

Update: 2020-08-07 13:32 GMT

ಬೆಳಗಾವಿ, ಆ.7: ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ಹಸಿರು ನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ಹೊಸದಿಲ್ಲಿಯಿಂದ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ತೋಮರ್, ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ಬೆಳೆಗೆ ನ್ಯಾಯಯುತ ದರ ಒದಗಿಸಲು ಸಹಕಾರಿಯಾಗಲಿದೆ. ಪ್ರಧಾನಮಂತ್ರಿಯ ಆಶಯದಂತೆ ರೈತರ ಆದಾಯ ದ್ವಿಗುಣಗೊಳಿಸಲು ಇಂತಹ ಕಿಸಾನ್ ರೈಲುಗಳು ಸಹಕಾರಿಯಾಗಲಿವೆ ಎಂದರು.

ಸೂಕ್ತ ಸಾಗಾಣಿಕೆ ಸೌಲಭ್ಯವಿದ್ದರೆ ದರ ಕುಸಿತ ತಡೆಯಲು ಸಾಧ್ಯ. ಆದುದರಿಂದ, ಇಂತಹ ಮಾರ್ಗದ ಅಗತ್ಯವಿದೆ. ಪ್ರಧಾನಮಂತ್ರಿಗೆ ದೇಶದ ಕೃಷಿಕರ ಪರವಾಗಿ ಅಭಿನಂದನೆ ಸಲ್ಲಿಸಿದ ಅವರು, ರೈತರ ಆದಾಯ ದ್ವಿಗುಣಗೊಳಿಸಲು ರೈಲ್ವೆ ಇಲಾಖೆಯ ಪಾತ್ರ ಕೂಡ ಮಹತ್ವದ್ದಾಗಿರಲಿದೆ ಎಂದರು.

ರೈತರ ಅತ್ಯಂತ ಅವಶ್ಯಕತೆಗೆ ಭಾರತ ಸರಕಾರ ಮೂರ್ತ ರೂಪ ನೀಡಿದೆ. ಕೃಷಿ ಉತ್ಪನ್ನಗಳನ್ನು ಸುಗಮವಾಗಿ ಸಾಗಾಣಿಕೆ ಮಾಡಲು ಅನುಕೂಲವಾಗುವಂತೆ ಕಿಸಾನ್ ರೈಲು ಆರಂಭಿಸಲಾಗಿದೆ. ರೈತರ ಅನುಕೂಲಕ್ಕಾಗಿ ವಿಶೇಷ ಕಿಸಾನ್ ರೈಲು ಆರಂಭಿಸುವ ಮೂಲಕ ರೈಲ್ವೆ ಇಲಾಖೆ ರೈತರ ಅಭಿವೃದ್ಧಿಗೆ ಕೈಜೋಡಿಸಿದೆ ಎಂದು ತೋಮರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ರೈಲ್ವೆ ಸಚಿವ ಪಿಯುಷ್ ಗೋಯಲ್, ಮೊದಲ ಕಿಸಾನ್ ರೈಲು ಪೈಲಟ್ ಯೋಜನೆಯಾಗಿದೆ. ಪ್ರಧಾನಮಂತ್ರಿಯ ಕನಸಿನ ಯೋಜನೆಗೆ ಇಂದು ಚಾಲನೆ ದೊರೆತಿದೆ. ದೇಶದ ಕೃಷಿಕರಿಗೆ ನೆರವಾಗುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ಮುಂದಾಗಿದೆ. ದೇಶದ ಪ್ರಗತಿಯ ಎಂಜಿನ್ ರೈಲ್ವೆ ಇಲಾಖೆ ಆಗಬೇಕು ಎಂಬುದು ಪ್ರಧಾನಮಂತ್ರಿಯ ಆಶಯವಾಗಿದೆ ಎಂದರು.

ದೇಶದ ಮೂಲೆಮೂಲೆಗಳಿಗೆ ಕೃಷಿ ಉತ್ಪನ್ನಗಳ ಸುಗಮ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು ಸಾಧ್ಯವಾಗಲಿದೆ. ಇದರಿಂದ ದೇಶದ ರೈತ ಸಮುದಾಯ ಸ್ವಾವಲಂಬಿಯಾಗುವುದರ ಜತೆಗೆ ದೇಶದ ಪ್ರಗತಿಗೆ ಸಹಕಾರಿಯಾಗಲಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಿಸಾನ್ ರೈಲು ಮೂಲಕ ಕೃಷಿ ಉತ್ಪನ್ನಗಳು ಎಲ್ಲೆಡೆ ತಲುಪಿಸುವುದು ನಮ್ಮ ಆಶಯವಾಗಿದೆ ಎಂದು ಗೋಯಲ್ ತಿಳಿಸಿದರು.

ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಕಿಸಾನ್ ರೈಲು ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು ರಾಜ್ಯ ಸರಕಾರ ಪ್ರಸ್ತಾವ ಸಲ್ಲಿಸಿದರೆ ಇಲ್ಲಿಂದಲೂ ಕಿಸಾನ್ ರೈಲು ಆರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು. ಪ್ರತಿ ರವಿವಾರ ಈ ರೈಲು ಸಂಚರಿಸಲಿದೆ ಎಂದರು.

ನಾಸಿಕ್ ಜಿಲ್ಲೆಯು ಅತೀ ಹೆಚ್ಚು ತರಕಾರಿ, ಹಣ್ಣು ಸೇರಿದಂತೆ ಕೃಷಿ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲು ಸೌಲಭ್ಯ ಕಲ್ಪಿಸಿರುವುದರಿಂದ ಉತ್ತಮ ದರ ಲಭಿಸಲಿದ್ದು, ಇದರಿಂದ ರೈತರ ಆತ್ಮಹತ್ಯೆಗೆ ಕಡಿವಾಣ ಬೀಳಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ನಾಸಿಕ್ ಜಿಲ್ಲಾ ಉಸ್ತುವಾರಿ ಸಚಿವ ಛಗನ್ ಭುಜಬಲ್ ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮಾತನಾಡಿ, ದೇಶದ ಕೃಷಿಕರ ಹಿತರಕ್ಷಣೆಗೆ ಬದ್ಧವಾಗಿರುವ ಪ್ರಧಾನಮಂತ್ರಿ ಕಿಸಾನ್ ರೈಲು ಒದಗಿಸುವ ಮೂಲಕ ಭರವಸೆ ಈಡೇರಿಸಿದ್ದಾರೆ. ಶಿಥಲೀಕರಣ ಘಟಕ ಹಾಗೂ ಸೂಕ್ತ ಸಾಗಾಣಿಕೆ ವ್ಯವಸ್ಥೆ ಇಲ್ಲದಿರುವುದರಿಂದ ರೈತರ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿರಲಿಲ್ಲ. ಕಿಸಾನ್ ರೈಲು ಸೌಲಭ್ಯದಿಂದ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆತು ರೈತರಿಗೆ ಅನುಕೂಲವಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News