ಗ್ರಾಪಂ ಮೂಲಕ ಮರಳು ಮಾರಾಟಕ್ಕೆ ಚಿಂತನೆ : ಮರಳುಗಾರಿಕೆ ಕುರಿತ ಸಭೆಯಲ್ಲಿ ಸಚಿವ ಕೋಟ

Update: 2020-08-10 18:04 GMT

ಮಂಗಳೂರು, ಆ.10: ಪ್ರಸಕ್ತ ಶ್ರೇಣಿ 1, 2, 3ರಲ್ಲಿರುವ ಮರಳನ್ನು ಗ್ರಾಮ ಪಂಚಾಯತ್‌ಗಳ ಮೂಲಕ ಸಾರ್ವಜನಿಕರಿಗೆ ಮಾರಾಟ ಮಾಡಲು ಚಿಂತಿಸಲಾಗಿದೆ ಎಂದು ಬಂದರು-ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮರಳುಗಾರಿಕೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು. ಸಾರ್ವಜನಿಕರಿಗೆ ಮರಳನ್ನು ಟನ್‌ಗೆ 700 ರೂ. ಯಂತೆ ಮಾರಾಟ ದರ ನಿಗದಿಪಡಿಸಲಾಗಿದೆ. ಈ ದರವನ್ನು ಇನ್ನಷ್ಟು ಕಡಿಮೆ ಮಾಡಲೂ ಚಿಂತಿಸಲಾಗಿದೆ. ನಗರ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಈ ಅನುಮತಿ ನೀಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಚಿವರು ಸೂಚಿಸಿದರು.

ಮರಳು ಸ್ಥಳ 15 ದಿನದೊಳಗೆ ಗುರುತಿಸಿ: ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.

ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿಡಿಒಗಳ ಜಂಟಿ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ ಸ್ಥಳ ಪರಿಶೀಲನಾ ವರದಿಯನ್ನು ತಾಲೂಕು ಮರಳು ಸಮಿತಿಯ ಶಿಫಾರಸಿನೊಂದಿಗೆ ಸಲ್ಲಿಸುವಂತೆ ಸೂಚಿಸಿದ ಸಚಿವರು, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮರಳನ್ನು ಸಾಗಿಸಲು ಟ್ರಾಕ್ಟರ್, ಎತ್ತಿನಗಾಡಿಗಳಂತಹ ಲಘು ವಾಹನಗಳನ್ನು ಬಳಸಲು ಮರಳು ನೀತಿಯಲ್ಲಿ ಅವಕಾಶವಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ವಾಹನಗಳ ಬಳಕೆ ಕಡಿಮೆ ಇರುವುದರಿಂದ ಇದರ ಬದಲು ‘407’ ಮಿನಿ ಲಾರಿ, ಲಘು ಟಿಪ್ಪರ್‌ಗಳಂತಹ ವಾಹನಗಳಲ್ಲಿ ಮರಳು ಕೊಂಡೊಯ್ಯಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೊಳೆ, ನದಿಗಳಲ್ಲಿ ಲಭ್ಯವಿರುವ ಮರಳಿನ ಗಣಿಗಾರಿಕೆ ಮಾಡಲು ರಾಜ್ಯ ಮಿನರಲ್ ಕಾರ್ಪೊರೇಶನ್ ಅವರಿಗೆ ಅಧಿಕಾರ ನೀಡಲಾಗುವುದು. ಈಗಾಗಲೇ ಗುರುತಿಸಲಾಗಿರುವ 30 ಬ್ಲಾಕ್‌ಗಳನ್ನು ಅವರಿಗೆ ವಹಿಸಲಾಗುವುದು. ಅದೇ ರೀತಿ ಅಣೆಕಟ್ಟು, ಜಲಾಶಯ, ಡ್ಯಾಂಗಳ ವ್ಯಾಪ್ತಿಯಲ್ಲಿ ಹಾಗೂ ಹಿನ್ನೀರಿನ ಪ್ರದೇಶಗಳಲ್ಲಿ ಲಭ್ಯವಿರುವ ಮರಳನ್ನು ಗುರುತಿಸಲು ಅಧಿಕಾರಿಗಳ ತಂಡ ಜಂಟಿ ಪರಿಶೀಲನೆ ನಡೆಸಿ ವರದಿ ನೀಡಲು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಿಆರ್‌ಝಡ್ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 14 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಗಣಿ ಸಚಿವರ ಅಧ್ಯಕ್ಷತೆಯಲ್ಲಿ 3-4 ದಿನಗಳಲ್ಲಿ ಬೆಂಗಳೂರಿನಲ್ಲಿ ಸಭೆ ನಡೆದು, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕಾ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಡಿಸಿಪಿ ಅರುಣಾಂಶು ಗಿರಿ, ಗಣಿ ಇಲಾಖೆ ಉಪನಿರ್ದೇಶಕ ರಾಂಜಿ ನಾಯ್ಕಿ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News