ನೂತನ ತಾಲೂಕುಗಳ ಮೂಲಭೂತ ಸೌಕರ್ಯಕ್ಕೆ ಹಣಕಾಸಿನ ನೆರವು: ಸಚಿವ ಬೊಮ್ಮಾಯಿ

Update: 2020-08-11 16:57 GMT

 ಹೆಬ್ರಿ, ಆ.11: ರಾಜ್ಯದಲ್ಲಿ ನೂತವಾಗಿ ರಚನೆಯಾಗಿರುವ ತಾಲೂಕುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರ ಬದ್ದವಾಗಿದ್ದು, ಇದಕ್ಕಾಗಿ ಹಣಕಾಸು ನೆರವಿನ ಘೋಷಣೆ ಮಾಡಲಾಗುವುದು ಎಂದು ರಾಜ್ಯದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಬ್ರಿಯ ತಾಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿ ದ್ದರು. ರಾಜ್ಯದಲ್ಲಿ ನೂತನ ತಾಲೂಕುಗಳು ಅಸ್ಥಿತ್ವಕ್ಕೆ ಬಂದಿದ್ದರೂ ಸಹ ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳ ನಿಯೋಜನೆ, ಇಲಾಖೆಗಳ ಆರಂಭ ಹಾಗೂ ಮೂಲಸೌಕರ್ಯಗಳ ಸಮಸ್ಯೆಗಳಿವೆ. ಇದಕ್ಕಾಗಿ ವಿಶೇಷ ಹಣಕಾಸಿನ ನೆರವು ನೀಡುವುದರ ಮೂಲಕ ಹೊಸ ತಾಲೂಕುಗಳಲ್ಲಿ ಸಾರ್ವಜನಿಕರಿಗೆ ಸುಗಮ ವಾಗಿ ಸರಕಾರದ ಸೇವೆಗಳನ್ನು ಒದಗಿಸಲಾಗುವುದು ಎಂದರು.

ಹೆಬ್ರಿ ನೂತನ ತಾಲೂಕಿನಲ್ಲಿ ನೆಮ್ಮದಿ ಕೇಂದ್ರ ಆರಂಭಿಸುವ ಕುರಿತಂತೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು. ಹೆಬ್ರಿಯ ಪೊಲೀಸ್ ಠಾಣೆಯನ್ನು ಸಂಪೂರ್ಣ ಸುಸಜ್ಜಿತಗೊಳಿಸಲಾಗುವುದು. ವಿಶೇಷ ಪ್ರಕರಣವೆಂದು ಪರಿಗಣಿಸಿ ಹೊಸ ಅಗ್ನಿಶಾಮಕ ಠಾಣೆಯನ್ನು ಮಂಜೂರು ಮಾಡಲಾಗುವುದು ಹಾಗೂ ಸೀತಾನದಿ ಏತ ನೀರಾವರಿ ಯೋಜನೆ ಕುರಿತಂತೆ ಪರಿಶೀಲಿಸಲಾಗುವುದು ಎಂು ಬೊಮ್ಮಾಯಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವರು 94ಸಿ ಹಕ್ಕುಪತ್ರಗಳನ್ನು ವಿತರಿಸಿ, ಸಾರ್ವಜನಿಕರ ವಿವಿಧ ಸಮಸ್ಯೆಗಳ ಕುರಿತು ಅಹವಾಲು ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋತ್, ಎಸ್ಪಿವಿಷ್ಣುವರ್ಧನ್, ಜಿಪಂ ಸದಸ್ಯೆ ರೇಷ್ಮಾ ಉದಯಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಮೇಜರ್ ಹರ್ಷ, ತಹಸೀಲ್ದಾರ್ ಮಹೇಶ್ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News