ಕಲಬುರಗಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಪ್ರಿಯಾಂಕ್ ಖರ್ಗೆ ಒತ್ತಾಯ
ಕಲಬುರಗಿ, ಆ.11: ಕಲಬುರಗಿ ನಗರದಲ್ಲಿ ಕೊರೋನ ಸೋಂಕು ಹಾಗೂ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಪ್ಲಾಸ್ಮಾ ಥೆರಪಿ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿಯೇ ಅತಿಹೆಚ್ಚು ಕೊರೋನ ಸೋಂಕಿತರನ್ನು ಹೊಂದಿದ ಜಿಲ್ಲೆಗಳಲ್ಲಿ ಕಲಬುರಗಿ ಸ್ಥಾನ ಪಡೆದಿದ್ದು, ಕೊರೋನದಿಂದ ಮೊದಲ ಸಾವು ಸಂಭವಿಸಿರುವುದೂ ಇಲ್ಲಿಯೇ ಎನ್ನುವುದು ಗಮನಾರ್ಹ. ಈವರೆಗೆ 140 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ದೊರಕದಿರುವುದರಿಂದ ಹಲವಾರು ಸೋಂಕಿತರು ಮಹಾರಾಷ್ಟ್ರ ಹಾಗೂ ಆಂಧ್ರಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೋನ ಸೋಂಕು ಪತ್ತೆ ಕೇಂದ್ರ ತೆರೆಯಲಾಗಿದ್ದು, ಹೆಚ್ಚಳವಾಗುತ್ತಿರುವ ಸೋಂಕು ಪತ್ತೆಗೆ ಇಎಸ್ಐಸಿ ಆಸ್ಪತ್ರೆಯಲ್ಲಿ ಮತ್ತೊಂದು ಕೇಂದ್ರ ತೆರೆಯುವಂತೆ ಸರಕಾರಕ್ಕೆ ಆಗ್ರಹಿಸುತ್ತಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದ್ದಾರೆ.