'ಕಲ್ಯಾಣ ರಾಜ್ಯ' ನಿರ್ಮಾಣ ನಮ್ಮ ಗುರಿ: ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಯಡಿಯೂರಪ್ಪ

Update: 2020-08-15 05:39 GMT

ಬೆಂಗಳೂರು, ಆ.15: 'ಅಭಿವೃದ್ಧಿಯೇ ಆಡಳಿತ ಮಂತ್ರ' ಎಂಬ ಧ್ಯೇಯದೊಂದಿಗೆ 'ಕಲ್ಯಾಣ ರಾಜ್ಯ'ವನ್ನು ಕಟ್ಟುವುದೇ ನಮ್ಮ ಗುರಿ. ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧದ ಹೋರಾಟದ ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪೆರೇಡ್‌ ಮೈದಾನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಬಳಿಕ ಅವರು ಸಂದೇಶ ನೀಡಿದರು.

ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದೆ. ಇದು ಇಂದು ಕೇವಲ ಆರೋಗ್ಯ ಕ್ಷೇತ್ರವನ್ನು ಮಾತ್ರ ಕಾಡಿಲ್ಲ. ಪ್ರತಿಯೊಂದು ಕ್ಷೇತ್ರವನ್ನೂ ಬಾಧಿಸಿದೆ ಮತ್ತು ಬಾಧಿಸುತ್ತಿದೆ. ನಾನು ಸಹ ಕೊರೊನ ಸೋಂಕಿನಿಂದ ಬಾಧಿತನಾಗಿ, ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖನಾಗಿರುತ್ತೇನೆ. ಜನರು ಈ ಸೋಂಕಿನ ಬಗ್ಗೆ ಆತಂಕ ಅಥವಾ ಭಯಭೀತರಾಗುವ ಅಗತ್ಯವಿಲ್ಲ. ಜಾಗರೂಕತೆಯಿಂದ ಜೀವನ ನಡೆಸಬೇಕಿದೆ ಎಂದು ಸಲಹೆ ನೀಡಿದರು.

.ರಾಜ್ಯದಲ್ಲಿ ಹೊಸದಾಗಿ ತಂದ ಕೈಗಾರಿಕಾಭಿವೃದ್ಧಿ ಸುಗಮಗೊಳಿಸುವ ಕಾಯ್ದೆ (ಇಂಡಸ್ಟ್ರಿಯಲ್ ಫೆಸಿಲಿಟೇಷನ್ ಆಕ್ಟ್) ಮೂಲಕ ಉದ್ಯಮಿಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಅಲ್ಲದೆ, ಯುವ ಜನತೆಯಲ್ಲಿ ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹ ಒದಗಿಸಲಾಗುತ್ತಿದೆ. ಜೊತೆಗೆ, ಉದ್ಯಮಿಗಳಿಗೆ ಅಗತ್ಯವಿರುವ ಭೂಮಿಯನ್ನು ಖರೀದಿಸುವುದಕ್ಕೆ ಸದ್ಯ ಇರುವ ನಿಯಮಾವಳಿಗಳನ್ನು ಸರಳೀಕರಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಂತೆ ರಾಜ್ಯಾದ್ಯಂತ ಉದ್ಯೋಗಾವಕಾಶಗಳನ್ನು ಸೃಜಿಸುವತ್ತ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಮರಳಿರುವವರಿಗೆ ಅವರು ಇರುವಲ್ಲಿಯೇ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿದೆ.

ದಾಖಲೆಯ ಮಳೆ ಮತ್ತು ಪ್ರವಾಹದ ಜೊತೆಗೆ ಬರ ಹಾಗೂ ಕೋವಿಡ್-19 ಬೃಹತ್ ಸವಾಲುಗಳನ್ನು ತಂದೊಡ್ಡಿದೆ. ಆರ್ಥಿಕ ಹಿಂಜರಿಕೆ, ಉದ್ಯೋಗ ಕಡಿತ ಹಾಗೂ ಬೊಕ್ಕಸಕ್ಕೆ ರಾಜಸ್ವ ನಷ್ಟ, ಸ್ತಬ್ಧವಾದ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ ಸ್ಥಾಪಿಸಲು ಹಾಗೂ ಸಂಕಷ್ಟಕ್ಕೆ ಈಡಾದ ಜನರಲ್ಲಿ ಭರವಸೆ ಮೂಡಿಸಲು ನಮ್ಮಸರ್ಕಾರ ಹಲವಾರು ಕ್ರಮ ಹಾಗೂ ಉಪಕ್ರಮಗಳನ್ನು ಜಾರಿಗೊಳಿಸಿದೆ

ಕೋವಿಡ್-19 ನಿರ್ವಹಣೆಗೆ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಶ್ರಮಿಸಿರುವುದಕ್ಕೆ ತಾವೆಲ್ಲರೂ ಸಾಕ್ಷಿಯಾಗಿರುವಿರಿ. ಸಚಿವರ ಕಾರ್ಯಪಡೆ, ಪರಿಣಿತ ವೈದ್ಯರ ಕಾರ್ಯಪಡೆ ಮತ್ತು ಅಧಿಕಾರಿಗಳ ಕಾರ್ಯಪಡೆಗಳನ್ನು ರಚಿಸಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಸ್ಪತ್ರೆಗಳು, ಫಿವರ್ ಕ್ಲಿನಿಕ್‍ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಸೋಂಕಿತರನ್ನು ಪತ್ತೆ ಮಾಡಿ ಪ್ರತ್ಯೇಕಗೊಳಿಸಲು ಕ್ವಾರಂಟೈನ್ ವ್ಯವಸ್ಥೆ ಜಾರಿಗೆ ತರಲಾಗಿದೆ.

ಆಯುಷ್ಮಾನ್ ಭಾರತ ಯೋಜನೆಯಡಿ 1.31 ಕೋಟಿಗಿಂತಲೂ  ಹೆಚ್ಚು  ಜನರಿಗೆ ಆರೋಗ್ಯ ಕಾರ್ಡ್‍ಗಳನ್ನು ವಿತರಿಸಲಾಗಿದೆ ಹಾಗೂ 1694 ಕೋಟಿ ರೂ ವೆಚ್ಚದಲ್ಲಿ ಈವರೆಗೆ 8.5 ಲಕ್ಷ  ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ.

ಕೊರೋನ ನಿಯಂತ್ರಣಕ್ಕೆ ಶ್ರಮಿಸಿದ ಸರ್ಕಾರದ ಆಡಳಿತ ಯಂತ್ರ, ಸರ್ಕಾರೇತರ ಸಂಸ್ಥೆಗಳು, ಉದ್ಯಮಿಗಳು, ಸ್ವಯಂ ಸೇವಕರು ಹಾಗೂ ಈ ಕ್ಲಿಷ್ಟಕರ ಸನ್ನಿವೇಶದಲ್ಲಿ ಅವಿರತವಾಗಿ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿದ ಪ್ರತಿಯೊಬ್ಬರನ್ನು ನಾನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

ವೈದ್ಯರು, ಶುಶ್ರೂಷಕರೂ ಒಳಗೊಂಡಂತೆ ಅರೆ ವೈದ್ಯಕೀಯ ಸೇವಾ ಸಿಬ್ಬಂದಿ ಹಾಗೂ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರವು ವಿಮಾ ಸೌಲಭ್ಯವನ್ನು ಘೋಷಿಸಿದೆ. ಕೋವಿಡ್-19 ರ ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತರು, ಪೌರ ಕಾರ್ಮಿಕರು, ಪೊಲೀಸರು  ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕೊರೋನ ಸೇನಾನಿಗಳು ಎಂದು ಪರಿಗಣಿಸಿ ಅವರು ಕೋವಿಡ್ ಬಾಧಕರಾದಲ್ಲಿ ಉಚಿತ ಆರೈಕೆಯನ್ನು ಒದಗಿಸಲು ಮತ್ತು ಮೃತಪಟ್ಟಲ್ಲಿ ಅವರ ಕುಟುಂಬಸ್ಥರಿಗೆ 30 ಲಕ್ಷ ರೂ. ಪರಿಹಾರವನ್ನು ನೀಡಲು ರಾಜ್ಯ ಸರ್ಕಾರದ ವತಿಯಿಂದ ನಿರ್ಧರಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೈಗೊಂಡ ಕ್ರಮಗಳು, ಘೋಷಿಸಿದ ಪ್ಯಾಕೇಜ್‍ಗಳ ಜೊತೆಗೆ ನಮ್ಮ ರಾಜ್ಯ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಹಾಗೂ ಪ್ರಕಟಿಸಲಾದ ಪ್ಯಾಕೇಜ್‍ಗಳು ಈ ಸಾಂಕ್ರಾಮಿಕ ರೋಗ ತಂದೊಡ್ಡಿದ ಸಂಕಷ್ಟಗಳ ತೀವ್ರತೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿವೆ. ಆದರೆ, ಸಾರ್ವಜನಿಕರು ಜಾಗೃತಿ ವಹಿಸದಿದ್ದರೆ ಸರ್ಕಾರದ ಈ ಯಾವ ಕ್ರಮಗಳೂ ನಿರೀಕ್ಷಿತ ಫಲವನ್ನು ನೀಡುವುದಿಲ್ಲ. ಆದ್ದರಿಂದ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಸರ್ಕಾರದ ಜೊತೆಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ನೇಗಿಲ ಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಪ್ರಥಮ ಆದ್ಯತೆ. ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ 6,000 ರೂ. ನಗದು ನೆರವಿನ ಜೊತೆಗೆ ನಮ್ಮ ಸರ್ಕಾರವು ಹೆಚ್ಚುವರಿಯಾಗಿ 4,000 ರೂ. ಆರ್ಥಿಕ ನೆರವಿನ 2000 ರೂ.ಗಳ ಮೊದಲ ಕಂತನ್ನು ಈಗಾಗಲೇ ಬಿಡುಗಡೆಮಾಡಿದೆ. ಒಂದು ಸಾವಿರ ಕೋಟಿ ರೂ. ಮೊತ್ತವನ್ನು ಸುಮಾರು 50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತಿದೆ.

ಅಂತರ್ಜಲ ನೀರಿನ ಸುಸ್ಥಿರ ನಿರ್ವಹಣೆಯಲ್ಲಿ ಬೇಡಿಕೆ ಹಾಗೂ ಸರಬರಾಜು ನಿರ್ವಹಣೆಗೆ ಸಮುದಾಯ ಸಹಭಾಗಿತ್ವದಲ್ಲಿ ಒತ್ತು ನೀಡುವ ಅಟಲ್ ಭೂ ಜಲ್ ಯೋಜನೆಯನ್ನು ರಾಜ್ಯದಲ್ಲಿ 1200 ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯತ್ ಗಳಲ್ಲಿ 39,703 ಚದರ ಕಿ.ಮೀ ಪ್ರದೇಶವು ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಮೊಟ್ಟಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿರುವ   ರಾಜ್ಯ ನಮ್ಮ ಕರ್ನಾಟಕ. ಕೇಂದ್ರ ಸರ್ಕಾರ ಇದನ್ನು ಪ್ರಶಂಸಿಸಿದೆ. ಅಂತೆಯೇ, ವಿಶ್ವ ಬ್ಯಾಂಕ್ ಕೂಡಾ ಕರ್ನಾಟಕ ರಾಜ್ಯ ಸರ್ಕಾರದ ಈ ಪ್ರಯತ್ನಕ್ಕೆ ಅಭಿನಂದನಾ ಪತ್ರ ನೀಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಮಾಡುವುದು ನಮ್ಮ ಸರ್ಕಾರದ ಆಶಯ. ಈ ಹಿನ್ನೆಲೆಯಲ್ಲಿ ಸಂವಿಧಾನದ ಪರಿಚ್ಛೇದ 371 (ಜೆ) ಅನ್ವಯ ವಿಶೇಷ ಸ್ಥಾನಮಾನ ಪಡೆದಿರುವ ಹೈದರಾಬಾದ್–ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಗಿದೆ. ಕೇವಲ ಹೆಸರು ಬದಲಾವಣೆ ಮಾತ್ರವಲ್ಲ; ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲು ಪೂರಕವಾಗುವಂತೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘವನ್ನು ಆರಂಭಿಸಲಾಗಿದೆ. ಈ ಸಂಘಕ್ಕೆ 500 ಕೋಟಿ ರೂ. ಅನುದಾನದ ಯೋಜನೆಗಳನ್ನು ಹಮ್ಮಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿ ರಾಜ್ಯದಲ್ಲಿ ಕಲಬುರಗಿ, ಬೀದರ್ ವಿಮಾನ ನಿಲ್ದಾಣಗಳು ಕಾರ್ಯಾರಂಭ ಮಾಡಿವೆ. ಇದಲ್ಲದೆ, ಶಿವಮೊಗ್ಗ ಕಿರು ವಿಮಾನ ನಿಲ್ದಾಣ ಕಾಮಗಾರಿಗಳು ವೇಗ ಪಡೆದುಕೊಂಡಿವೆ. ಕಾರವಾರ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಆರಂಭಿಸಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಉದ್ಯೋಗ ಸೃಷ್ಟಿ ಮಾಡುವ ಪ್ರಮುಖ ವಲಯವಾದ ಪ್ರವಾಸೋದ್ಯಮವನ್ನು ಬಲಪಡಿಸಲು ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗಿದೆ. ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಹಲವು ವಿನೂತನ ಯೋಜನೆಗಳನ್ನು ರೂಪಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು, ತ್ಯಾಜ್ಯ ವಿಲೇವಾರಿ, ಅಭಿವೃದ್ಧಿಯ ಪ್ರತೀಕವಾದ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ.

ವಿಶ್ವ ವಿಖ್ಯಾತಿ ಪಡೆದಿರುವ ಉದ್ಯಾನನಗರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸಾಮಾಜಿಕ ಮತ್ತು ಜೈವಿಕ ಮೂಲಭೂತ ಸೌಲಭ್ಯಗಳ  ಪುನಶ್ಚೇತನಕ್ಕೆ  ವಿನೂತನ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ 400 ಕಿ.ಮೀ ಉದ್ದದ ರಾಜಕಾಲುವೆಗಳಿದ್ದು, ಈ ನೀರ್ಗಾಲುವೆಗಳ ಹಸಿರೀಕರಣ, ಇದರ ಇಕ್ಕೆಲಗಳಲ್ಲಿ ಪಾದಚಾರಿ ಮತ್ತು ಬೈಸಿಕಲ್ ಪಥ ನಿರ್ಮಾಣಕ್ಕೆ ಯೋಜನೆಗಳನ್ನು ರೂಪಿಸಲಾಗಿದೆ. ಮೊದಲನೇ ಹಂತದಲ್ಲಿ ಧರ್ಮಾಂಬುಧಿ  ಕೆರೆಯಿಂದ  (ಪ್ರಸ್ತುತ  ಕೆಂಪೇಗೌಡ  ಬಸ್ ನಿಲ್ದಾಣ)  ಬೆಳ್ಳಂದೂರು ಕೆರೆವರೆಗೆ  ಪಾರಂಪರಿಕ ರಾಜ ಕಾಲುವೆಯ ಹಸಿರೀಕರಣ ಮಾಡಿ 36 ಕಿ.ಮೀ. ಉದ್ದದ ಕಾಲ್ನಡಿಗೆ ಹಾಗೂ ಬೈಸಿಕಲ್ ಪಥ ನಿರ್ಮಾಣ ಮಾಡುವ ಮೂಲಕ ನಗರದ ಸಾಮಾಜಿಕ ಮತ್ತು ಸಾಂಸ್ಕøತಿಕ ಸೌಂದರ್ಯಗಳನ್ನು ಉತ್ತಮಪಡಿಸಲು ಉದ್ದೇಶಿಸಲಾಗಿದೆ.

ಜಾಗತಿಕ ಮಟ್ಟದಲ್ಲಿ ಬೆಂಗಳೂರು ಹೂಡಿಕೆದಾರರ ಆಸಕ್ತಿಯ ಕೇಂದ್ರವಾಗಿದೆ. ರಾಜಧಾನಿಯ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರು ಸಬ್-ಅರ್ಬನ್ ರೈಲ್ವೆ ಯೋಜನೆಗೆ ವೇಗ ಹೆಚ್ಚಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-2 ನ್ನು ಒಟ್ಟು 30,695 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿದ್ದು, 2024ರ ಜೂನ್ ವೇಳೆಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದರು.

ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಹಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹ ಪೀಡಿತ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಲು ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ತಕ್ಷಣದ ಪರಿಹಾರವಾಗಿ 10,000- ರೂ.ಗಳು, ಪೂರ್ಣ ಮನೆ ಹಾನಿಯಾಗಿದ್ದರೆ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳನ್ನು ವಿತರಿಸಲು ಆದೇಶಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ ನೆರೆ ಸಂತ್ರಸ್ತರಿಗೆ ಸೂಕ್ತ ಹಾಗೂ ತುರ್ತು ಪರಿಹಾರವನ್ನು ನೀಡಲು ಸೂಚಿಸಲಾಗಿದೆ.

ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿಕರಿಗಾಗಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News