ಬೆಂಗಳೂರು ಗೋಲಿಬಾರ್: ಗಾಯಾಳು ಯುವಕ ಮೃತ್ಯು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬೆಂಗಳೂರು, ಆ15: ಮಂಗಳವಾರ ತಡರಾತ್ರಿ ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಡಿಜೆ ಹಳ್ಳಿ ನಿವಾಸಿ ಸೈಯ್ಯದ್ ನದೀಮ್ (22) ಮೃತ ಯುವಕ. ಈತ ಡಿ.ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಮೂಲಕ ಗೋಲಿಬಾರ್ ನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಸಾವಿನ ಸಂಖ್ಯೆ ಏರಿಕೆ?: ಗಲಾಟೆ ಸಂದರ್ಭದಲ್ಲಿ ಪರಿಸ್ಥಿತಿ ಶಾಂತಗೊಳಿಸಲು ಪೊಲೀಸರು ಸುಮಾರು 22ಕ್ಕೂ ಅಧಿಕ ಗುಂಡುಗಳನ್ನು ಹಾರಿಸಿದರು ಎನ್ನಲಾಗಿದ್ದು, ಈ ಪೈಕಿ 14 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಕೊರೋನ ದೃಢ
ಮೃತ ಸೆಯ್ಯದ್ ನದೀಮ್ಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸರಕಾರದ ನಿಯಮದಡಿ ಅಂತ್ಯಕ್ರಿಯೆ ನಡೆಸಲು ಸೂಚಿಸಲಾಗಿದೆ ಎಂದು ಮೃತರ ಸಂಬಂಧಿಯೊಬ್ಬರು ಮಾಹಿತಿ ಹಂಚಿಕೊಂಡರು.