ಉತ್ತರ ಪ್ರದೇಶದಲ್ಲಿ ಪೈಶಾಚಿಕ ಘಟನೆ: 13ರ ಬಾಲಕಿಯ ಅತ್ಯಾಚಾರ, ಹತ್ಯೆ ಮಾಡಿದ ದುಷ್ಕರ್ಮಿಗಳು

Update: 2020-08-16 04:11 GMT

ಲಕ್ನೋ: ಇಡೀ ಮನುಕುಲವೇ ತಲೆ ತಗ್ಗಿಸುವ ರೀತಿಯ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಕಬ್ಬಿನ ಗದ್ದೆಯೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಸಂತ್ರಸ್ತೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅದೇ ಗ್ರಾಮದ ಇಬ್ಬರನ್ನು ಬಂಧಿಸಲಾಗಿದೆ.

ಬಾಲಕಿಯ ಉಸಿರುಗಟ್ಟಿಸಿ, ಕಣ್ಣುಗಳನ್ನು ಕಿತ್ತು ನಾಲಿಗೆ ಕತ್ತರಿಸಲಾಗಿದೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಲಕ್ನೋದಿಂದ 130 ಕಿಲೋಮೀಟರ್ ದೂರದ ನೇಪಾಳ ಗಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಶುಕ್ರವಾರ ನಡೆದಿದ್ದು, ಆರೋಪಿಯೊಬ್ಬನ ಹೊಲದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು.

ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ. ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅತ್ಯಾಚಾರ, ಕೊಲೆ ಮತ್ತು ರಾಷ್ಟ್ರೀಯ ಭದ್ರತೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಶುಕ್ರವಾರ ಮಧ್ಯಾಹ್ನದಿಂದ ಬಾಲಕಿ ನಾಪತ್ತೆಯಾಗಿದ್ದಳು. ಎಲ್ಲೆಡೆ ಆಕೆಯನ್ನು ಹುಡುಕುತ್ತಿದ್ದೆವು. ಆಕೆಯನ್ನು ಕೊನೆಗೆ ಕಬ್ಬಿನ ಗದ್ದೆಯಲ್ಲಿ ಪತ್ತೆ ಮಾಡಿದೆವು. ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ, ದುಪ್ಪಟದಿಂದ ಉಸಿರುಗಟ್ಟಿಸಿ ಅಮಾನುಷವಾಗಿ ಹತ್ಯೆ ಮಾಡಲಾಗಿದೆ ಎಂದು ಬಾಲಕಿಯ ತಂದೆ ವಿವರಿಸಿದ್ದಾರೆ.

ಘಟನೆಯನ್ನು ತೀರಾ ನಾಚಿಕೆಗೇಡು ಎಂದು ಬಣ್ಣಿಸಿರುವ ಬಿಎಸ್ಪಿ ನಾಯಕಿ ಮಾಯಾವತಿ, ಇಂಥ ಘಟನೆಗಳು ನಡೆಯುತ್ತಿವೆ ಎಂದಾದರೆ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರಕ್ಕೆ ಹಾಗೂ ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಏನು ವ್ಯತ್ಯಾಸ ಎಂದು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News