ನಿರ್ಮಲಾರನ್ನು ಭೇಟಿಯಾದ ಸಿ.ಟಿ.ರವಿ: ಕಾಫಿ, ಅಡಿಕೆ, ಮೆಣಸು, ಏಲಕ್ಕಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಮನವಿ

Update: 2020-08-18 13:37 GMT

ಹೊಸದಿಲ್ಲಿ, ಆ.18: ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಚಿಕ್ಕಮಗಳೂರು ಜಿಲ್ಲೆಯ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರನ್ನು ಭೇಟಿಯಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟ್ಟಗಳನ್ನು ವಿವರಿಸಿದ ರವಿ, ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಿ ರೈತರ ಹಿತ ಕಾಪಾಡುವಂತೆ ಮನವಿ ಮಾಡಿದರು.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಸತತ ಎರಡು ವರ್ಷದಿಂದ ಪ್ರವಾಹ ಉಂಟಾಗಿ ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಇದರಿಂದ ಸಾವಿರಾರು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ ಎಂದು ಅವರು ಮನವರಿಕೆ ಮಾಡಿಕೊಟ್ಟರು.

ಈ ಹಿಂದೆ  2015-16, 2016-17, 2017-18ರಲ್ಲಿ ಉಂಟಾದ ಸತತ ಬರಗಾಲ ಹಾಗೂ 2019-20 ಹಾಗೂ ಪ್ರಸಕ್ತ ವರ್ಷವೂ ಜಿಲ್ಲೆಯಲ್ಲಿ ಭಾರೀ ಪ್ರವಾಹ ಉಂಟಾಗಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ಏಲಕ್ಕಿ, ಬಾಳೆ, ಭತ್ತ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಅವರು ವಿವರಿಸಿದರು.

ಇದರ ಜತೆಗೆ ಈ ಬಾರಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಬಂದ ಪರಿಣಾಮ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇರುವುದರಿಂದ ಸರಕಾರ ನೆರವಿಗೆ ಧಾವಿಸಬೇಕೆಂದು ಅವರು ಮನವಿ ಮಾಡಿದರು.

ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಅಲ್ಪಾವಧಿ ಬೆಳೆ ಸಾಲ ವಿತರಣೆ, ಕೃಷಿ ಬೆಳೆ ಸಾಲದ ಮಿತಿಯನ್ನು 3 ಲಕ್ಷಕ್ಕೆ ಹೆಚ್ಚಳ ಮಾಡುವುದು, ಪ್ರಸಕ್ತ ವರ್ಷ ರೈತರಿಗೆ ನೀಡುವ ಸಾಲಕ್ಕೆ ಬಡ್ಡಿ ವಿಧಿಸದಿರುವುದು, ಕಾಫಿ ಮಂಡಳಿಗೆ ಬಾಕಿ ಇರುವ ಸಹಾಯಧನವನ್ನು ತಕ್ಷಣ ಬಿಡುಗಡೆ ಮಾಡುವುದು, ರಸಗೊಬ್ಬರ, ಕ್ರಿಮಿನಾಶಕ ಸೇರಿದಂತೆ ಮತ್ತಿತರ ವಸ್ತುಗಳಿಗೆ ಜಿಎಸ್‍ಟಿಯಿಂದ ವಿನಾಯ್ತಿ ಹಾಗೂ ರಸಗೊಬ್ಬರಗಳಿಗೆ ಸಹಾಯಧನವನ್ನು ಘೋಷಿಸುವಂತೆ ಅವರು ಮನವಿ ಪತ್ರದಲ್ಲಿ ತಿಳಿಸಿದರು.

ವಿಶೇಷವಾಗಿ ಸಣ್ಣ ಕಾಫಿ ಬೆಳೆಗಾರರಿಗೆ ಆದಾಯ ತೆರಿಗೆ ನಿಯಮ 1961ರ ನಿಯಮ 7 ಬಿ(1) ರದ್ದುಗೊಳಿಸುವುದು ಸೇರಿದಂತೆ ಹಲವು ರೀತಿಯ ರಿಯಾಯ್ತಿಗಳನ್ನು ನೀಡಬೇಕೆಂದು ಸಿ.ಟಿ.ರವಿ ವಿವರಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 15 ಸಾವಿರ ಕಾಫಿ ಬೆಳೆಗಾರರಿದ್ದು, ಶೇ.90ರಷ್ಟು ಜನರು ನಾಲ್ಕು ಹೆಕ್ಟೇರ್ ಗಿಂತ ಕಡಿಮೆ ಬೆಳೆಗಾರರಿದ್ದಾರೆ. ಪ್ರತಿ ವರ್ಷ ಸುಮಾರು ಒಂದು ಸಾವಿರ ಕೋಟಿ ರೂ.ಗೂ ಅಧಿಕ ತೆರಿಗೆಯನ್ನು ಸರಕಾರಕ್ಕೆ ಸಲ್ಲಿಸುತ್ತಾರೆ. ಹೀಗಾಗಿ ಅವರ ಹಿತ ಕಾಪಾಡಬೇಕೆಂದು ಅವರು ಆಗ್ರಹಿಸಿದರು.

ಸಕಾರಾತ್ಮಕ ಸ್ಪಂದನೆ: ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಚಿವ ಸಿ.ಟಿ.ರವಿ ಅವರ ಮನವಿಯನ್ನು ಆಲಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಕಷ್ಟ್ಟದಲ್ಲಿರುವ ಬೆಳೆಗಾರರಿಗೆ ಕೇಂದ್ರ ಸರಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ದವಿದೆ ಎಂದು ಆಶ್ವಾಸನೆ ನೀಡಿದರು.

ಮುಂದಿನ ವಾರ ಕಾಫಿ ಬೆಳೆಗಾರರ ಪ್ರತಿನಿಧಿಗಳ ಜತೆ ವೆಬಿನಾರ್ (ವಿಡಿಯೋ ಕಾನ್ಫರೆನ್ಸ್) ನಡೆಸಲಾಗುವುದು. ನಂತರ ಅಧಿಕಾರಿಗಳ ಜತೆ ಚರ್ಚಿಸಿ ವಿಶೇಷ ಪ್ಯಾಕೇಜ್ ಇಲ್ಲವೇ ಆರ್ಥಿಕ ನೆರವು ಬಿಡುಗಡೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಾಫಿ ಬೆಳೆಗಾರರ ಸಂಕಷ್ಟ ತಮಗೆ ಮನವರಿಕೆಯಾಗಿದ್ದು, ಯಾರೊಬ್ಬರೂ ದೃತಿಗೆಡುವ ಅಗತ್ಯವಿಲ್ಲ. ಕೇಂದ್ರ ಸರಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ದವಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News