ಕಾಂಗ್ರೆಸ್ ಕಾರ್ಯಕರ್ತರನ್ನೇ ಪೊಲೀಸರು ಟಾರ್ಗೆಟ್ ಮಾಡುತ್ತಿದ್ದಾರೆ: ಸತೀಶ್ ಜಾರಕಿಹೊಳಿ ಆರೋಪ

Update: 2020-08-21 15:23 GMT

ಬೆಳಗಾವಿ, ಆ.21:  ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಶುಕ್ರವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಲಭೆ ಪ್ರಕರಣದಡಿ ಬೆಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರು ತೊಂದರೆ ಕೊಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡಬೇಡಿ ಎಂದು ಪೊಲೀಸರಿಗೆ ಮನವರಿಕೆ ಮಾಡಿದ್ದೇವೆ. ನಮ್ಮ ಪಕ್ಷದ ಮುಖಂಡರನ್ನು ಹಾಗೂ ಬಿಬಿಎಂಪಿ ಹಾಲಿ, ಮಾಜಿ ಸದಸ್ಯರನ್ನು ಸುಖಾಸುಮ್ಮನೆ ವಶಕ್ಕೆ ಪಡೆಯಲಾಗುತ್ತಿದೆ ಎಂದು ದೂರಿದರು.

ಗಲಭೆ ಪ್ರಕರಣದಡಿ ಕಾಂಗ್ರೆಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂಬ ಅನುಮಾನ ನಮ್ಮದು. ನಮ್ಮವರನ್ನು ಟಾರ್ಗೆಟ್ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ಈಗಾಗಲೇ ಹೇಳಿದ್ದಾರೆ. ಆ ವೇಳೆ ಮಿಸ್ಟರ್ ಪದ ಬಳಕೆ ಮಾಡಿದ್ದಾರೆ. ಮಿಸ್ಟರ್ ಪದ ಬಳಸಿದರೆ ಧಮ್ಕಿ ಹೇಗಾಗುತ್ತೆ ಎಂದು ಟೀಕಾಕಾರರಿಗೆ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.

ಪ್ರಕರಣ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು. ಅಂದಾಗ ಮಾತ್ರ ಸತ್ಯಾಸತ್ಯತೆ ಹೊರಬರಲು ಸಾಧ್ಯವಾಗುತ್ತದೆ. ಮುಂದೆ ಇಂಥ ಘಟನೆ ನಡೆಯದಂತೆ ಕೂಡ ನಿಗಾ ವಹಿಸಲು ಅನುಕೂಲ ಆಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನವೀನ್ ವಿರುದ್ಧ ದೂರು ದಾಖಲಿಸಲು ಸ್ಥಳೀಯರು ಪೊಲೀಸ್ ಠಾಣೆಗೆ ಹೋಗಿದ್ದರು. ಮೂರು ಗಂಟೆಗಳ ಕಾಲ ಪೊಲೀಸರು ದೂರುದಾರರನ್ನು ಠಾಣೆಯಲ್ಲಿ ಕೂರಿಸಿಕೊಂಡಿದ್ದರು. ತಕ್ಷಣವೇ ಪ್ರಕರಣ ದಾಖಲಿಸಿಕೊಂಡಿದ್ದರೆ ಬೆಂಗಳೂರು ಗಲಭೆ ಆಗುತ್ತಿರಲಿಲ್ಲ. ದೂರು ಪಡೆಯಲು ವಿಳಂಬ ಮಾಡಿದ್ದೇ ಗಲಭೆಗೆ ಕಾರಣವಾಯಿತು. ಗಲಭೆಗೆ ಸರಕಾರದ ವ್ಯವಸ್ಥೆ ಕಾರಣವೇ ಹೊರತು, ಕಾಂಗ್ರೆಸ್ ಮೇಲೆ ಬೊಟ್ಟು ಮಾಡುವುದು ಸರಿಯಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News