ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಶಿವಾಜಿ ಅಭಿಮಾನಿಗಳಿಂದ ಧರಣಿ; ಲಾಠಿ ಪ್ರಹಾರ

Update: 2020-08-28 12:14 GMT

ಬೆಳಗಾವಿ, ಆ. 28: ಇಲ್ಲಿನ ಪೀರನವಾಡಿಯಲ್ಲಿ ತಡರಾತ್ರಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ್ದು, ಅದನ್ನು ವಿರೋಧಿಸಿ ಎಂಇಎಸ್‍ನ ಕೆಲವರು, ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನಿಸಿದ್ದಲ್ಲದೆ, ಪೊಲೀಸರು ಹಾಗೂ ರಾಯಣ್ಣ ಅಭಿಮಾನಿಗಳ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಪೊಲಿಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದು, ಪೀರನವಾಡಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ಪೀರನವಾಡಿಯ ವಿವಾದಿತ ಸ್ಥಳದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಅಭಿಮಾನಿಗಳು `ಬೆಳಗಾವಿ ಚಲೋ' ನಡೆಸಿದ್ದರು. ಆ.30ರೊಳಗೆ ಪ್ರತಿಮೆ ಸ್ಥಾಪನೆ ವಿವಾದ ಬಗೆಹರಿಸುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ದರು. ಆದರೆ, ತಡರಾತ್ರಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಮೂರ್ತಿ ಪ್ರತಿಷ್ಠಾಪಿಸಿದ್ದರು.

ಆ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆಯೇ ಏಕಾಏಕಿ ಬೀದಿಗಿಳಿದ ಪೀರನವಾಡಿಯ ಎಂಇಎಸ್ ಮತ್ತು ಮರಾಠಿಗರು ಪ್ರತಿಭಟನೆಗೆ ಮುಂದಾಗಿದ್ದು, ಮತ್ತೊಂದೆಡೆ ರಾಯಣ್ಣನ ಮೂರ್ತಿ ಸ್ಥಾಪನೆಯಿಂದ ರಾಯಣ್ಣನ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದರು. ಹೀಗಾಗಿ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಡಿಸಿಪಿ ಸೀಮಾ ಲಾಟ್ಕರ್, ಎಸಿಪಿ ನಾರಾಯಣ ಭರಮನಿ, ಎಸಿಪಿ ಶಿವಾರೆಡ್ಡಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸಪಟ್ಟರು.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿಚಾರ ಇದೀಗ ರಾಜ್ಯಾದ್ಯಂತ ವಿವಾದವಾಗಿದ್ದು, ಕನ್ನಡ ಮತ್ತು ಮರಾಠಿಗರ ನಡುವಿನ ಸಮಸ್ಯೆಯೂ ಆಗುತ್ತಿದೆ. ರಾಯಣ್ಣನ ಪುತ್ಥಳಿ ಎದುರಿನಲ್ಲೇ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಬೇಕೆಂದು ಎಂಇಎಸ್ ಪಟ್ಟು ಹಿಡಿದಿದ್ದು, ವಿವಾದ ಮತ್ತಷ್ಟು ತಾರಕಕ್ಕೇರಿದೆ. `ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಮೆ ಸ್ಥಾಪಿಸಲಿದ್ದೇವೆ' ಎಂಬ ಸರಕಾರದ ಭರವಸೆ ನೀಡಿದ್ದರೂ, ರಾತ್ರೋರಾತ್ರಿ ರಾಯಣ್ಣನ ಪುತ್ಥಳಿ ಸ್ಥಾಪಿಸಿರುವುದು ಸ್ಥಳೀಯ `ರಾಜಕೀಯ' ಕೈವಾಡದ ಶಂಕೆ ವ್ಯಕ್ತವಾಗಿದೆ.

ಇದೇ ವೇಳೆ ಪೊಲೀಸರು ಮತ್ತು ರಾಯಣ್ಣ ಅಭಿಮಾನಿಗಳ ಮೇಲೆಯೇ ಕಲ್ಲು ತೂರಾಟ ನಡೆಸಲು ಕೆಲ ಕಿಡಿಗೇಡಿಗಳು ಯತ್ನಿಸಿದರು. ಬಳಿಕ ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ಮಾಡಿ ಅಲ್ಲಿ ನೆರೆದಿದ್ದ ಗುಂಪನ್ನು ಪೊಲೀಸರು ಚದುರಿಸಿದ್ದಾರೆ. ಆದರೂ, ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಪರಿಸ್ಥಿತಿ ಶಾಂತವಾಗಿದೆ

ಕನ್ನಡಿಗರು ಮತ್ತು ಮರಾಠಿಗರು ಎಂಬ ಸಮಸ್ಯೆ ಯಾವುದೇ ಕಾರಣಕ್ಕೂ ಉದ್ಭವಿಸಬಾರದು. ಈಗಾಗಲೇ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಸ್ಥಾಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪರಿಸ್ಥಿತಿ ಶಾಂತವಾಗಿದೆ. ಪ್ರತಿಮೆ ಸ್ಥಾಪನೆ ಸೇರಿದಂತೆ ಎಲ್ಲವೂ ಬಗೆಹರಿದಿದ್ದು, ಅಲ್ಲಿನ ಅಧಿಕಾರಿಗಳು ಶ್ರಮವಹಿಸಿ ಎಲ್ಲವನ್ನು ನಿಭಾಯಿಸಿದ್ದಾರೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಸರಕಾರದ ನಿರ್ಲಕ್ಷ್ಯದಿಂದ ವಿವಾದ

ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ಸೂಚಿಸಿದ್ದೇನೆ. ರಾಯಣ್ಣನ ಪ್ರತಿಮೆ ಸ್ಥಾಪನೆ ಸರಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು'

-ಸಿದ್ದರಾಮಯ್ಯ, ವಿಪಕ್ಷ ನಾಯಕ

ಅಗತ್ಯ ಬಂದೋಬಸ್ತ್ ಮಾಡಲಾಗಿದೆ

ರಾಯಣ್ಣ ಪ್ರತಿಮೆ ವಿವಾದ ಬಗೆಹರಿಸಲು ಸಿಎಂ ಸೂಚಿಸಿದ್ದು, ಉಸ್ತುವಾರಿ ಸಚಿವರೂ ಸಭೆ ಮಾಡಿದ್ದಾರೆ. ವಿವಾದ ಸೌಹಾರ್ದಯುತವಾಗಿ ಬಗೆಹರಿಸಲಾಗುವುದು. ಬೆಂಗಳೂರಿನಿಂದ ಕಾನೂನು-ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸ್ಥಳಕ್ಕೆ ತೆರಳಿದ್ದಾರೆ. ಐಜಿ ಜೊತೆಗೂ ಮಾತಾಡಿದ್ದು, ಎರಡೂ ಸಮುದಾಯದ ಜನ ಸೇರಿದ್ದರು. ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಅಗತ್ಯ ಇರುವ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉಭಯ ಸಮುದಾಯಗಳೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ವಿವಾದ ಬಗೆಹರಿಸಲಾಗುವುದು'

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

ಮರಾಠಿಗರ ದಾಂಧಲೆ ಅಕ್ಷಮ್ಯ

ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ. ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ. ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ'

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ಪ್ರತಿಮೆ ವಿಚಾರದಲ್ಲಿ ಭಾಷೆ, ಜಾತಿ ಪ್ರಶ್ನೆ ಸಲ್ಲ

ರಾಷ್ಟ್ರ ನಾಯಕರು, ದೇಶಭಕ್ತರ ವಿಚಾರದಲ್ಲಿ ಕನ್ನಡ ಮತ್ತು ಮರಾಠಿ, ಜಾತಿ ಪ್ರಶ್ನೆ ಬರಬಾರದು. ರಾಯಣ್ಣ ಪ್ರತಿಮೆ ಸ್ಥಾಪಿಸಲು ತೀರ್ಮಾನ ಮಾಡಲಾಗಿದೆ. ಉಸ್ತುವಾರಿ ಸಚಿವರ ಜತೆ ಚರ್ಚಿಸಿದ್ದು, ರಾಯಣ್ಣ ಪ್ರತಿಮೆ ಸ್ಥಾಪಿಸುವ ವಿಚಾರದಲ್ಲಿ ಯಾರೊಬ್ಬರ ವಿರೋಧ ಇಲ್ಲ. ಸಿಎಂ ಅವರೂ ಕಾಗಿನೆಲೆ ಸ್ವಾಮೀಜಿಗಳ ಜತೆ ಚರ್ಚಿಸಿದ್ದು ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡುವ ಬಗ್ಗೆ ಭರವಸೆ ಕೊಟ್ಟಿದ್ದಾರೆ. ಎಲ್ಲರೂ ಶಾಂತಿ ಕಾಪಾಡಬೇಕು'

-ಕೆ.ಎಸ್.ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News