ಜಪ್ಪಿನಮೊಗರು ಕಟ್ಟಪುಣಿ ರಸ್ತೆ ಅಭಿವೃದ್ಧಿಗೆ ಚಾಲನೆ
ಮಂಗಳೂರು, ಆ.28: ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಕುಡ್ಪಾಡಿವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಿಂದ ಕುಡ್ಪಾಡಿ ಅಂಡರ್ ಪಾಸ್ವರೆಗಿನ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಅನೇಕ ಮನೆಗಳಿದ್ದು ಓಡಾಟಕ್ಕೆ ಈ ರಸ್ತೆಯನ್ನೇ ಅವಲಂಭಿಸಿದ್ದಾರೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಈ ಸಂದರ್ಭ ಕಾರ್ಪೊರೇಟರ್ ವೀಣಾ ಮಂಗಳ, ಮನಪಾ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷ ಜಗದೀಶ್ ಶೆಟ್ಟಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಯ ಅದ್ಯಕ್ಷೆ ಪೂರ್ಣಿಮಾ, ಪಾಲಿಕೆಯ ಸದಸ್ಯರಾದ ಶೈಲೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಸುರೇಂದ್ರ ಜಪ್ಪಿನಮೊಗರು, ಭಾಸ್ಕರ್ಚಂದ್ರ ಶೆಟ್ಟಿ, ಕಿರಣ್ ರೈ ಎಕ್ಕೂರು, ಸಂದೇಶ್ ಶೆಟ್ಟಿ, ವಸಂತ್ ಜೆ. ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.