ಕೈಗಾರಿಕೆಗಳ ಅಭಿವೃದ್ದಿಗೆ ರಾಜ್ಯ ಸರಕಾರದಿಂದ ಹೆಚ್ಚಿನ ಆದ್ಯತೆ: ಸಚಿವ ಜಗದೀಶ್ ಶೆಟ್ಟರ್

Update: 2020-09-01 15:27 GMT

ರಾಯಚೂರು, ಸೆ.1: ಕೈಗಾರಿಕೆಗಳ ಅಭಿವೃದ್ದಿಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಬೆಂಗಳೂರು ಕೇಂದ್ರಿತ ವ್ಯವಸ್ಥೆಯಿಂದ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಕೈಗಾರಿಕೆಗಳ ಬೆಳವಣಿಗೆಗೆ ಆದ್ಯತೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಮಂಗಳವಾರ ನಗರದ ಹೊರವಲಯದಲ್ಲಿರುವ ಯರಮರಸ್ ಸಕ್ಯೂರ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕೇಂದ್ರಿತ ಕೈಗಾರಿಕಾ ಅಭಿವೃದ್ದಿಯನ್ನು ಹೊರತುಪಡಿಸಿ, ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಕೈಗಾರಿಕೆಗಳ ಏಳಿಗೆಗೆ ಸರಕಾರದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಕಲಬುರಗಿಯಲ್ಲಿ ಹೂಡಿಕೆದಾರರ ಸಮ್ಮೇಳನ ಆಯೋಜಿಸುವುದಾಗಿ ತಿಳಿಸಿದರು.

ಕಳೆದ 10 ತಿಂಗಳ ಹಿಂದಿನಿಂದಲೂ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗಾಗಿ ಅವಿರತ ಶ್ರಮ ಹಾಕಲಾಗಿದೆ, ಅದರ ಅಂಗವಾಗಿ ಹುಬ್ಬಳಿಯಲ್ಲಿ ಇನ್‍ವೆಸ್ಟ್ ಕರ್ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲಾಯಿತು, ಕೊರೋನ ಸೋಂಕು ಹಿನ್ನೆಲೆಯಲ್ಲಿ ಈ ನಡುವೆ ಸ್ಪಲ್ಪ ಮಟ್ಟಿನ ಹಿನ್ನಡೆ ಅನುಭವಿಸುವಂತಾಯಿತು ಎಂದು ಅವರು ಹೇಳಿದರು.

ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ 3 ಸಾವಿರ ಎಕರೆಗೂ ಹೆಚ್ಚು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಕೈಗಾರಿಕಾ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಅದರಲ್ಲಿ 2 ಸಾವಿರ ಎಕರೆ ಭೂಮಿಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು ಹಾಗೂ ರಸ್ತೆ ಅಭಿವೃದ್ದಿ ಪಡಿಸಲಾಗಿದೆ. ಹುಬ್ಬಳಿಯಲ್ಲಿ ನಡೆದ ಇನ್‍ವೆಸ್ಟ್ ಕರ್ನಾಟಕದಿಂದಾಗಿ ಇಲ್ಲಿ 15 ಫಾರ್ಮಾಸ್ಯುಟಿಕಲ್ ಕಂಪೆನಿಗಳು ಕಾರ್ಯಾರಂಭಿಸಲು ಮುಂದೆ ಬಂದಿವೆ, ಮುಂಬರುವ ಕೆಲವೆ ತಿಂಗಳಲ್ಲಿ ಅವುಗಳ ಉತ್ಪಾದನೆ ಆರಂಭಗೊಳ್ಳಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಬಲ್ಕ್ ಡ್ರಗ್ ಪಾರ್ಕ್ ನಿರ್ಮಾಣಕ್ಕೆ 500ರಿಂದ ಒಂದು ಸಾವಿರ ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ, ಅದಕ್ಕಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಪತ್ರ ಬರೆಯಲಾಗಿದೆ. ಪ್ರಧಾನ ಮಂತ್ರಿ ಇದಕ್ಕೆ ಹಸಿರು ನಿಶಾನೆ ತೋರಬೇಕಿದೆ. ಅವರನ್ನು ಭೇಟಿ ಮಾಡಲಾಗುವುದು ಎಂದು ಅವರು ಹೇಳಿದರು.

ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾದ ಕಲಬುರಗಿಯಲ್ಲಿ ಕೈಗಾರಿಕೋದ್ಯಮಿಗಳ ಸಭೆ ಹಾಗೂ ರೋಡ್ ಶೋ ಹಮ್ಮಿಕೊಳ್ಳಲಾಗುವುದು, ಕೊಪ್ಪಳದಲ್ಲಿ ಆಟಿಕೆ ಕೈಗಾರಿಕೆಗಾಗಿ 400 ಎಕರೆ ಸ್ಥಳ ಪಡೆಯಲಾಗಿದ್ದು, ಅಕ್ಟೋಬರ್ ತಿಂಗಳಲ್ಲಿ ಭೂಮಿ ಪೂಜೆ ನಡೆಸಲಾಗುತ್ತದೆ. ಆರರಿಂದ ಎಂಟು ತಿಂಗಳಲ್ಲಿ ಉತ್ಪಾದನೆ ಆರಂಭಗೊಳ್ಳಲಿದ್ದು, 1500 ರಿಂದ 2 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ. 40 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ತಿಳಿಸಿದರು.

ಕೈಗಾರಿಕೆಗಳ ಆರಂಭಕ್ಕೆ ಇಲಾಖೆಯಲ್ಲಿ ಸರಳೀಕರಣ ಮಾಡಲು ಯತ್ನಿಸಲಾಗುತ್ತಿದೆ, ವಿವಿಧ ಸೌಕರ್ಯಗಳಿಗೆ ಕೋರಿದ ಕೂಡಲೆ ಅನುಮತಿ ನೀಡುವ ವ್ಯವಸ್ಥೆ ಆರಂಭವಾಗಿದೆ. ಹೊಸ ಕಾನೂನು ಪ್ರಕಾರ, ರಾಜ್ಯ ಮಟ್ಟದಲ್ಲಿ ಅನುಮೋದನೆ ಮಾಡಿದ ತಕ್ಷಣ ಕಟ್ಟಡ ಕಾಮಗಾರಿ ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದ್ದು, 79 ಎ ಬಿ ತೆಗೆಯಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಕ್ರಿಯೆಗಳು ನಡೆಯುತ್ತಿವೆ, ಅದಕ್ಕಾಗಿ ಮೂಲಭೂತ ಸೌಕರ್ಯ ಕಾರ್ಯದರ್ಶಿ ಈಗಾಗಲೆ ಇಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ, ಆದಷ್ಟು ಬೇಗನೆ ಇಲ್ಲಿ ವಿಮಾನ ನಿಲ್ದಾಣ ಆರಂಭಗೊಳ್ಳಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ್, ಮುಖಂಡರು ಹಾಗೂ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News