ಶಿರಸಿಯಲ್ಲಿ ಉಗ್ರರಿದ್ದಾರೆ ಎಂಬ ಸುದ್ದಿ ಸುಳ್ಳು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಣೆ
Update: 2020-09-02 14:10 GMT
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಜೆಎಂಬಿ ಉಗ್ರರಿದ್ದಾರೆ ಎನ್ನುವ ಬಗ್ಗೆ ಸುಳ್ಳು ಸುದ್ದಿಗಳನ್ನು ಕೆಲವು ಟಿವಿ, ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದ್ದು ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಎಚ್ಚರಿಕೆ ನೀಡಿದ್ದಾರೆ.
ಕೆಲವು ಟಿವಿ ಮತ್ತು ಮಾಧ್ಯಮದಲ್ಲಿ, "ಜೆಎಂಜಿ ಉಗ್ರರ ಅಡಗುತಾಣವಾಗಿದ್ದು, ಕರ್ನಾಟಕ ಶಾಂತಿಯ ನಗರಿ ಶಿರಸಿ ಜೆಎಂಜಿ ಉಗ್ರರು ಮಾಡಿದ್ದೇನು" ಸೇರಿದಂತೆ ಶಿರಸಿಗೆ ರಾ ಹಾಗೂ ಕೇಂದ್ರ ಗುಪ್ತದಳದ ಅಧಿಕಾರಿಗಳ ಭೇಟಿ ಕುರಿತ ಸುಳ್ಳು ಸುದ್ದಿಗಳನ್ನು ಹರಡಲಾಗಿದೆ. ಈ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಜಿಲ್ಲಾ ಪೊಲೀಸ್ ಇಲಾಖೆಯ ಕಚೇರಿಯಿಂದ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.