ಲಂಚಕ್ಕೆ ಬೇಡಿಕೆಯಿಟ್ಟ ಆರೋಪ: ಹೂವಿನಹಡಗಲಿ ತಹಶೀಲ್ದಾರ್ ಅಮಾನತು
Update: 2020-09-06 15:46 IST
ಬಳ್ಳಾರಿ, ಸೆ.6: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತಹಶೀಲ್ದಾರ್ ವಿಜಯಕುಮಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ಹೊರಡಿಸಿದ್ದಾರೆ.
ಹೂವಿನ ಹಡಗಲಿ ತಾಲೂಕಿನಲ್ಲಿ ಉಮೇಶ ನಾಯ್ಕ ಎಂಬವರ ಮರಳು ಸಾಗಣೆ ಲಾರಿಯೊಂದನ್ನು ವಶಪಡಿಸಿಕೊಂಡಿದ್ದ ತಹಶೀಲ್ದಾರ್ ವಿಜಯ ಕುಮಾರ್, ಲಾರಿ ಬಿಟ್ಟುಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದೆ. ಈ ಕುರಿತ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ತಹಶೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.