ಉಡುಪಿ: 216 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢ
ಉಡುಪಿ, ಸೆ.6: ನೋವೆಲ್ ಕೊರೋನ ಸೋಂಕು ರವಿವಾರ ಜಿಲ್ಲೆಯ 216 ಮಂದಿಯಲ್ಲಿ ದೃಢಪಟ್ಟಿದ್ದು, ಈ ಮೂಲಕ ಈವರೆಗೆ ಜಿಲ್ಲೆಯಲ್ಲಿ ಸೋಂಕಿತರಾದವರ ಒಟ್ಟು ಸಂಖ್ಯೆ 12727ಕ್ಕೆ ಏರಿದೆ. ಅಲ್ಲದೇ ದಿನದಲ್ಲಿ 629 ಮಂದಿಯ ಗಂಟಲುದ್ರವದ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೋವಿಡ್ ಪಾಸಿಟಿವ್ ಪತ್ತೆಯಾದ 216 ಮಂದಿಯಲ್ಲಿ ಉಡುಪಿ ತಾಲೂಕಿನ 137 ಮಂದಿ, ಕುಂದಾಪುರ ತಾಲೂಕಿನ 43 ಹಾಗೂ ಕಾರ್ಕಳ ತಾಲೂಕಿನ 31 ಮಂದಿ ಇದ್ದು, ಉಳಿದಂತೆ ಹೊರಜಿಲ್ಲೆಯಿಂದ ಉಡುಪಿಗೆ ಚಿಕಿತ್ಸೆಗೆಂದು ಬಂದ ಐವರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ ಎಂದವರು ತಿಳಿಸಿದರು.
ದಿನದಲ್ಲಿ ಮಕ್ಕಳು ಸೇರಿದಂತೆ 114 ಮಂದಿ ಪುರುಷರು ಹಾಗೂ 102 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 47 ಪುರುಷರು ಹಾಗೂ 49 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ.ಸೂಡ ಹೇಳಿದರು.
ಪಾಸಿಟಿವ್ ದೃಢಗೊಂಡ 216 ಮಂದಿಯಲ್ಲಿ 74 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 84 ಮಂದಿ ಶೀತಜ್ವರದಿಂದ ಹಾಗೂ 11 ಮಂದಿ ಉಸಿರಾಟದ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶಿಯ ಪ್ರವಾಸದಿಂದ ಮರಳಿದ ಏಳು ಮಂದಿಯಲ್ಲಿ ಸಹ ಸೋಂಕು ಪತ್ತೆಯಾಗಿದೆ. ಇನ್ನು 40 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.
270 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ರವಿವಾರ 270 ಮಂದಿ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 106 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 164 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದು ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 10763ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1852 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ 933 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 919 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಹೇಳಿದರು.
938 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ರವಿವಾರ ಒಟ್ಟು 938 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 641 ಮಂದಿ, ಕೋವಿಡ್ ಸಂಪರ್ಕಿತರು 160 ಮಂದಿ ಇದ್ದರೆ, ಉಸಿರಾಟ ತೊಂದರೆಯ 10 ಮಂದಿ, ಶೀತಜ್ವರದಿಂದ ಬಳಲುವ 44 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 83 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪರೀಕ್ಷೆಗಾಗಿ ಪಡೆದ ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 77829ಕ್ಕೇರಿದೆ. ಇವುಗಳಲ್ಲಿ ಈವರೆಗೆ 64,752 ನೆಗೆಟಿವ್, 12727 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 112 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 350 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ರವಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನೊಂದಿಗೆ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.