×
Ad

ಗುಣಮುಖರಾದವರಲ್ಲಿ ಮತ್ತೆ ಕೊರೋನ ಸೋಂಕು: ಅಧ್ಯಯನಕ್ಕೆ ಸಚಿವ ಸುಧಾಕರ್ ಸೂಚನೆ

Update: 2020-09-07 18:18 IST

ಬೆಂಗಳೂರು, ಸೆ.7: ಕೊರೋನಾದಿಂದ ಗುಣಮುಖರಾದವರಲ್ಲಿ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕೋವಿಡ್-19 ಟೆಸ್ಟಿಂಗ್ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊರೋನದಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದರು.

ಇತರೆ ರಾಷ್ಟ್ರಗಳಲ್ಲೂ ಈ ರೀತಿಯ ಪ್ರಕರಣಗಳು ಕಂಡು ಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿ ಬಂದಿವೆ. ನಮ್ಮಲ್ಲೂ ಇಂಥ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕದ ವಿಷಯ. ಆದರೆ, ಇದನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕೊರೋನ ಬಾಧಿಸುತ್ತದೆ ಎಂಬ ಆತಂಕ ದೂರ ಮಾಡಬೇಕು ಎಂದು ಅವರು ಹೇಳಿದರು.

ಕೋವಿಡ್‍ನಿಂದ ಗುಣಮುಖರಾದವರ ದೇಹದಲ್ಲಿ ಬಿಳಿರಕ್ತ ಕಣಗಳ ಮರು ಉತ್ಪಾದನೆಗೆ  ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಕೆಲವರಿಗೆ ಸೋಂಕು ಮತ್ತೊಮ್ಮೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು ಎಂದು ಸಭೆಯಲ್ಲಿ ತಜ್ಞರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಮತ್ತೊಮ್ಮೆ ಕೊರೋನ ಸೋಂಕು ಕಾಣಿಸಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಅಳವಡಿಸಿಕೊಂಡಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಅಷ್ಟೇ ಅಲ್ಲದೆ, ಕೋವಿಡ್‍ನಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಅವರು ಅನುಸರಿಸಬೇಕಾದ ಎಚ್ಚರಿಕೆ ಹಾಗೂ ಇತರೆ ಕ್ರಮಗಳ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ ಎಂಬ ವಿಷಯಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.

ಬೂತ್ ಮಟ್ಟದ ಸಮಿತಿಗೆ ಜವಾಬ್ದಾರಿ: ಕೋವಿಡ್ ನಿಯಂತ್ರಣ ಬೂತ್‍ಮಟ್ಟದಿಂದ ಮಾತ್ರ ಸಾಧ್ಯ ಎಂಬುದನ್ನು ಮೊದಲಿನಿಂದ ಪ್ರತಿಪಾದಿಸಿದ್ದೇವೆ. ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕೊರೋನ ಪರೀಕ್ಷೆ ನಡೆಸುವುದರಿಂದ ಸುಲಭವಾಗಿ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಜಾವೇದ್ ಅಖ್ತರ್, ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News