×
Ad

ಅವಧಿ ಮುಗಿದ ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನಾ ಸಮಿತಿ: ಕೋಟ

Update: 2020-09-11 21:07 IST

ಉಡುಪಿ, ಸೆ.11: ಜಿಲ್ಲೆಯಲ್ಲಿ ಈಗಾಗಲೇ ಬಿ ಮತ್ತು ಸಿ ವರ್ಗದ ಒಟ್ಟು 52 ದೇವಸ್ಥಾನಗಳ ಅವಧಿ ಮುಗಿದಿದ್ದು, ಆಡಳಿತಾಧಿಕಾರಿ ನೇಮಕಾತಿ ಆಗಿರುವ ಈ ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಪ್ರಕಟಣೆ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿ ಗಳಿಗೆ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌ನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಈಗಾಗಲೇ ಅವಧಿ ಮುಗಿದಿರುವ ಬಿ ಮತ್ತು ಸಿ ವರ್ಗದ ದೇವಸ್ಥಾನಗಳಿಗೆ ನೇಮಕಾತಿ ಮಾಡಿರುವ ಆಡಳಿತಾಧಿಕಾರಿ ಆದೇಶಗಳಿಗೆ ಅನುಮೋದನೆ ನೀಡಿದ ಸಚಿವರು, ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ಧಾರ್ಮಿಕ ಪರಿಷತ್ ಸದಸ್ಯರಿಗೆ ಪರಿಷತ್‌ನ ಕಾರ್ಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ವೇದ ಪಾಠಶಾಲೆ ಆರಂಭಿಸುವ ಕುರಿತಂತೆ ಸೂಕ್ತ ಸ್ಥಳ ಗುರುತಿಸುವಂತೆ ಸಮಿತಿಯ ಸದಸ್ಯರಿಗೆ ತಿಳಿಸಿದ ಸಚಿವ ಕೋಟ, ಎಲ್ಲಾ ಸದಸ್ಯರಿಗೆ ಗುರುತಿನ ಚೀಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಜಿಲ್ಲೆಯಲ್ಲಿ ತಸ್ತೀಕ್ ಬಿಡುಗಡೆ ಕುರಿತಂತೆ ಮಾಹಿತಿ ಪಡೆದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಧಾರ್ಮಿಕ ದತ್ತಿ ಇಲಾಖೆಯ ಪ್ರಭಾರ ಸಹಾಯಕ ಆಯುಕ್ತ ಶೇಷಪ್ಪ, ತಹಶೀಲ್ದಾರ್ ಸುಧಾಕರ್, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯರಾದ ಹರಿಪ್ರಸಾದ್ ಭಟ್, ರಾಮ್‌ಭಟ್, ವಾಸುದೇವ ಹಂಗಾರಕಟ್ಟೆ, ಶಾಲಿನಿ, ಸುನೀಲ್,ಪ್ರಣಯ್ ಶೆಟ್ಟಿ, ರಮಾಕಾಂತ ದೇವಾಡಿಗ, ಮೋಹನ ಉಪಾಧ್ಯಾಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News