'ಡ್ರಗ್ಸ್' ಆರೋಪ ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿ ಸರಕಾರಕ್ಕೆ ಬರೆದುಕೊಡುತ್ತೇನೆ: ಝಮೀರ್ ಅಹ್ಮದ್

Update: 2020-09-11 15:51 GMT

ಬೆಂಗಳೂರು, ಸೆ.11: ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಪ್ರಶಾಂತ್ ಸಂಬರಗಿ ಎಂಬಾತನ ಸುಳ್ಳು ಆರೋಪಗಳ ಬಗ್ಗೆ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದೇನೆ. ದೂರಿನಂತೆ ಐಪಿಸಿ ಸೆಕ್ಷನ್ 120(ಬಿ), 504, 463, 465, 506 ಸೆಕ್ಷನ್‍ಗಳ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆಗೆ ಚಾಮರಾಜಪೇಟೆ ಠಾಣೆಯ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

2019ರ ಜೂನ್ 8ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೊ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದುದರಿಂದ, ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಝಮೀರ್ ಅಹ್ಮದ್ ಖಾನ್ ಒತ್ತಾಯಿಸಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News