ಅಂಗನವಾಡಿ ಸೇವೆ ಡಿಜಿಟಲೀಕರಣ: ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದ ಸಚಿವ ವಿ.ಸೋಮಣ್ಣ

Update: 2020-09-14 10:22 GMT

ಮಡಿಕೇರಿ ಸೆ.14 : ಪೋಷಣ್ ಅಭಿಯಾನ್ ಯೋಜನೆಯಡಿ ಕೇಂದ್ರ ಸರಕಾರ ರಾಜ್ಯಕ್ಕೆ 129 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಅಂಗನವಾಡಿ ಸೇವೆಗಳನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯದ 66 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್‍ಗಳನ್ನು ಹಾಗೂ 921 ಅಂಗನವಾಡಿಗಳಿಗೆ ಸ್ಯಾಮ್‍ಸಂಗ್ ಕಂಪೆನಿಯ ತಲಾ 10 ಸಾವಿರ ರೂ.ಮೌಲ್ಯದ ಮೊಬೈಲ್‍ಗಳನ್ನು ನೀಡಲಾಗುತ್ತಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದ ಜಿ.ಪಂ.ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಅಭಿಯಾನ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಫೋನ್ ವಿತರಿಸಿ ಹಾಗೂ ಪೋಷಣ್ ಅಭಿಯಾನ್ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಯಾವುದೇ ಮಕ್ಕಳು, ತಾಯಂದಿರು ಅಪೌಷ್ಠಿಕತೆಯಿಂದ ಬಳಲಬಾರದು. ಅಂಗನವಾಡಿಗಳಲ್ಲಿ ನೀಡುವ ಔಷಧೋಪಚಾರ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ಸಂಗ್ರಹಿಸಬಹುದಾಗಿದೆ. ಅಲ್ಲದೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಚುಚ್ಚುಮದ್ದು, ದಾಖಲಾತಿ ಸಂಖ್ಯೆಗಳ ಬಗ್ಗೆಯೂ ಸಹ ಮೊಬೈಲ್ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

ಮಾತೃಪೂರ್ಣ, ಮಾತೃ ವಂದನ ಸೇರಿದಂತೆ 40 ಬಗೆಯ ಕಾರ್ಯಕ್ರಮ ಕಡತಗಳನ್ನು ಮೊಬೈಲ್ ಮೂಲಕವೇ ನಿರ್ವಹಣೆ ಮಾಡಬಹುದು ಎಂದು ವಿ.ಸೋಮಣ್ಣ ಅವರು ತಿಳಿಸಿದರು.

ಜಿಲ್ಲೆಯಲ್ಲಿ ನೆಟ್‍ವರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗಮನ ಸೆಳೆದರು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್  ಅಧ್ಯಕ್ಷ  ಬಿ.ಎ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿಸಿಎಫ್‍ಗಳಾದ ಪ್ರಭಾಕರನ್, ಮಹೇಶ್ ಕುಮಾರ್ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News