ಹಿಂದಿ ಹೇರಿಕೆಗೆ ಖಂಡನೆ: ಕೇಂದ್ರ ಸರಕಾರದ ವಿರುದ್ಧ ತುಮಕೂರಿನಲ್ಲಿ ಕರವೇ ಪ್ರತಿಭಟನೆ
ತುಮಕೂರು, ಸೆ.14: ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಕೇಂದ್ರ ಸರಕಾರ ನಡೆಸಿದ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು ಕೇಂದ್ರ ಸರಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತ ಹಲವಾರು ಭಾಷೆ ಮತ್ತು ವಿಭಿನ್ನ ಸಂಸ್ಕೃತಿಯನ್ನು ಹೊಂದಿರುವ ವಿವಿಧತೆಯಲ್ಲಿ ಏಕತೆ ಹೊಂದಿರುವ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ನಂತರ ರಚನೆಯಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಕೇಂದ್ರ ಸರಕಾರ ಮೊದಲಿನಿಂದಲೂ ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಉದ್ದೇಶದಿಂದ ದೇಶದ ಎಲ್ಲ ಭಾಷೆಗಳ ಜನರ ತೆರಿಗೆ ಹಣದಲ್ಲಿ ಪ್ರತಿ ವರ್ಷ ಸೆ.14 ರಂದು ಕರ್ನಾಟಕ ಸೇರಿದಂತೆ ಹಿಂದಿಯೇತರ ದ್ರಾವಿಡ ಭಾಷೆಗಳನ್ನು ಮಾತನಾಡುವ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಸಪ್ತಾಹ ನಡೆಸಿ ಹಿಂದಿಯೇತರರನ್ನು ದೇಶದ 2ನೇ ದರ್ಜೆಯ ಪ್ರಜೆಗಳಂತೆ ಕಾಣುತ್ತಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಕರವೇ (ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಕೆ.ಎನ್. ಮಂಜುನಾಥ್ ಗೌಡ ಮಾತನಾಡಿ, ಕೇಂದ್ರ ಸರಕಾರ ಬಲವಂತವಾಗಿ ಆಯಾ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುವ ಪ್ರಯತ್ನ ಮಾಡುತ್ತಿರುವುದನ್ನು ಖಂಡನೀಯ ಎಂದರು.
ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಬಿಂಬಿಸುತ್ತಿರುವ ಕೇಂದ್ರ ಸರಕಾರ ಯಾವ ಭಾಷೆ ಎಷ್ಟು ವರ್ಷಗಳ ಕಾಲ ಇತಿಹಾಸ ಇದೆ ಎಂಬುದನ್ನು ಮನಗಾಣಬೇಕು. ಕನ್ನಡ ಭಾಷೆಗೆ 3 ಸಾವಿರ ವರ್ಷ ಇತಿಹಾಸ ಇದೆ. ಆದರೆ ಹಿಂದಿ ಭಾಷೆಗೆ ಕೇವಲ 600 ವರ್ಷಗಳ ಇತಿಹಾಸ ಮಾತ್ರ ಇದೆ. ಹಾಗಾಗಿ ಕನ್ನಡ ಭಾಷೆಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡಲಿ ಎಂದು ಅವರು ಒತ್ತಾಯಿಸಿದರು.
ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರ ತಕ್ಷಣದಿಂದಲೇ ತನ್ನದ ನಿಲುವನ್ನು ಬದಲಿಸಿಕೊಂಡು ಈ ವಿಚಾರವನ್ನು ಕೈ ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಹೋರಾಟಗಳು ಉಗ್ರ ಸ್ವರೂಪ ಪಡೆದುಕೊಳ್ಳಲಿವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರವೇ ಉಪಾಧ್ಯಕ್ಷ ಕುಮಾರಣ್ಣ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುನೀತಾಮೂರ್ತಿ, ಮಹದೇವಯ್ಯ, ಬಾಲು, ಮಂಜು, ರವಿ ಮತ್ತಿತರರು ಪಾಲ್ಗೊಂಡಿದ್ದರು.