×
Ad

ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

Update: 2020-09-15 12:36 IST

ಬೆಂಗಳೂರು, ಸೆ.15: ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ 70ನೆ ವರ್ಷದ ಹುಟ್ಟುಹಬ್ಬದ, ವಿಶೇಷ ಸಂದರ್ಭದಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.

ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ ನಿರ್ಮಾಣವಾಗಲಿರುವ ವಿಷ್ಣುವರ್ಧನ್ ಸ್ಮಾರಕದ ಕಾಮಗಾರಿಗೆ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆನ್‍ಲೈನ್ ಮೂಲಕ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಡಾ.ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು ಎಂದು ಅವರು ಹೇಳಿದರು.

ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ” ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು. ಕನ್ನಡ ಚಿತ್ರರಂಗಕ್ಕೆ ಡಾ.ರಾಜ್‍ಕುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ಡಾ.ವಿಷ್ಣುವರ್ಧನ್ ಸೇರಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸತತವಾಗಿ 38 ವರ್ಷಗಳ ಕಾಲ, ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸಿನಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ. “ನಾಗರಹಾವು” ಸಿನಿಮಾದಿಂದ “ಆಪ್ತರಕ್ಷಕ” ಸಿನಿಮಾವರೆಗಿನ, ಅವರ ಸಾಧನೆಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ವಿಷ್ಣುವರ್ಧನ್ ಸಿನಿಮಾ ರಂಗದ ಜೊತೆಗೆ ವಿಶೇಷವಾದ ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು. ಸಮಾಜದ ಆಗು-ಹೋಗುಗಳ ಬಗ್ಗೆ ಸ್ಪಂದಿಸುವ ಮತ್ತು ಮಾನವೀಯತೆಯನ್ನು ತೋರುವ ವಿಶೇಷ ಗುಣ ಅವರಲ್ಲಿತ್ತು. ವಿಷ್ಣುವರ್ಧನ್ ಅವರ ಶ್ರೀಮತಿ ಪದ್ಮಶ್ರಿ ಪುರಸ್ಕೃತೆ ಡಾ.ಭಾರತಿ ವಿಷ್ಣುವರ್ಧನ್ ಪಂಚಭಾಷೆ ತಾರೆಯಾಗಿ, ಅತ್ಯುತ್ತಮ ಕಲಾವಿದೆಯಾಗಿ ನಮ್ಮ ನಡುವೇ ಇರುವುದು ಸಂತೋಷದ ಸಂಗತಿ ಎಂದು ಅವರು ತಿಳಿಸಿದರು.

ಭಾರತಿ ದಂಪತಿಗಳ ಅಳಿಯ ಅನಿರುದ್ಧ್ ಅವರು ಉತ್ತಮ ಕಲಾವಿದರು ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದುದರಿಂದ, ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಡಾ.ವಿಷ್ಣುವರ್ಧನ್ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ಮೈಸೂರು ತಾಲೂಕಿನ ಎಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ. 5 ಎಕರೆ ಪ್ರದೇಶದಲ್ಲಿ ಪೊಲೀಸ್ ವಸತಿಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸ್ಮಾರಕ ನಿರ್ಮಾಣಕ್ಕೆ ಆಯವ್ಯಯದಲ್ಲಿ 11 ಕೋಟಿ ರೂ.ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು 5 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಷ್ಣುವರ್ಧನ್ ಅವರ ಕೀರ್ತಿ ಜನ ಮಾನಸದಲ್ಲಿ ಎಂದೆಂದಿಗೂ ಅಜರಾಮರವಾಗಿರಲಿ, ಇವರ ನಟನಾ ಕೌಶಲ್ಯ, ಇವರ ಸಾಧನೆಯ ಹಾದಿ ಮುಂದಿನ ಪೀಳಿಗೆಗೆ ಮಾದರಿಯಾಗಲಿ.

ವಿಷ್ಣುವರ್ಧನ್ ಅವರಿಗೆ ನನ್ನ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತಾ ಆದಷ್ಟು ಶೀಘ್ರ ಸ್ಮಾರಕದ ನಿರ್ಮಾಣ ಪೂರ್ಣಗೊಳ್ಳಲಿ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News