ಸಂಬಳ ಕೇಳಿದ ಗ್ರಾಮ ಸಹಾಯಕಿಗೆ ಲೈಂಗಿಕ ಕಿರುಕುಳದ ಆರೋಪ: ಭದ್ರಾವತಿ ತಹಶೀಲ್ದಾರ್ ಅಮಾನತು
Update: 2020-09-15 12:45 IST
ಶಿವಮೊಗ್ಗ, ಸೆ.15: ಸಂಬಳ ಕೇಳಿದ ಗ್ರಾಮ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಸಂಬಳ ನೀಡುವಂತೆ ತಹಶೀಲ್ದಾರ್ ಶಿವಕುಮಾರ್ ಬಳಿ ಮನವಿ ಮಾಡಿಕೊಂಡಿದ್ದಾಳೆ. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಮಾತ್ರ ಸಂಬಳ ಮಾಡಿಕೊಡುವುದಾಗಿ ತಿಳಿಸಿದ್ದಾಗಿ ಸಂತ್ರಸ್ತ ಮಹಿಳೆ ಆರೋಪಿಸಿದ್ದಾಳೆ. ಈ ಬಗ್ಗೆ ಆಕೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ವಿರುದ್ಧ ದೂರು ದಾಖಲಿಸಿದ್ದಾರೆ.
ತಹಶೀಲ್ದಾರ್ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಪ್ರಕರಣದ ಹಿನ್ನೆಲೆಯಲ್ಲಿ ಶಿವಕುಮಾರ್ ರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.