ಸಂಪುಟ ವಿಸ್ತರಣೆ ಇಂದು(ಸೆ.19) ಸಂಜೆಯೊಳಗೆ ತೀರ್ಮಾನ ಸಾಧ್ಯತೆ: ಯಡಿಯೂರಪ್ಪ

Update: 2020-09-19 04:48 GMT

ಹೊಸದಿಲ್ಲಿ, ಸೆ.19: ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ಭವನ-1 ಕಾವೇರಿಯಲ್ಲಿ ತನ್ನನ್ನು ಇಂದು ಬೆಳಗ್ಗೆ ಭೇಟಿ ಮಾಡಿದ ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದ ಅವರು,  ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಶನಿವಾರ ಸಂಜೆ ವೇಳೆ ಸೂಚನೆ ನೀಡುವ ಸಾಧ್ಯತೆ ಇದೆ. ವರಿಷ್ಠರ ಅನುಮತಿ ಮತ್ತು ಸಹಮತ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ದಿಲ್ಲಿ ಭೇಟಿ ಅತ್ಯಂತ ಯಶಸ್ವಿ:

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವಗಳಿಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ಇದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡಾ ರಾಜ್ಯದ ಅಭಿವೃದ್ಧಿ ಪ್ರಸ್ತಾವಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ದಿಲ್ಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News