ನದಿ ಪಾತ್ರದ ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿ

Update: 2020-09-19 13:06 GMT

ಬೆಳಗಾವಿ, ಸೆ.19: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದುದರಿಂದ, ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರವಾಹಕ್ಕೆ ಪ್ರಮುಖ ಕಾರಣ ನದಿ ತೀರದ ಒತ್ತುವರಿ ಕಾರಣವಾಗಿದೆ. ನದಿಗಳು ಸರಾಗವಾಗಿ ಹರಿಯಲು ಅವಕಾಶ ನೀಡಬೇಕಿದೆ. ಆದುದರಿಂದ, ಮೊದಲು ಸಮೀಕ್ಷೆ ಆಗಲಿ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ನದಿತೀರಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಶಾಶ್ವತ ಯೋಜನೆ ರೂಪಿಸಿ ಸರಕಾರದಿಂದ ಅಗತ್ಯ ಹಣಕಾಸಿನ ನೆರವು ಪಡೆದುಕೊಳ್ಳಲಾಗುವುದು. ಸಮೀಕ್ಷೆ ಬಳಿಕ ಸಂಬಂಧಿಸಿದ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸಮಗ್ರ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ವಿಧಾನ ಸಭೆಯ ಉಪಸಭಾಪತಿ ಆನಂದ ಮಾಮನಿ ಮಾತನಾಡಿ, ಮೊದಲು ನದಿಗಳ ಒತ್ತುವರಿ ಬಗ್ಗೆ ಸಮೀಕ್ಷೆ ಮಾಡಿ ಗುರುತು ಮಾಡಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುವುದು ಸೂಕ್ತ. ನದಿ ತೀರದ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಬೇಕಿದೆ ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು.

ನದಿಪಾತ್ರದ ಒತ್ತುವರಿ ಕುರಿತು ಸಭೆಗೆ ಮಾಹಿತಿ ನೀಡಿದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಮಳೆಗಾಲದಲ್ಲಿ ಪ್ರವಾಹ ಸಾಧ್ಯತೆ ಇರುವುದರಿಂದ ನದಿ ತೀರದ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್ ಆದೇಶ ನೀಡಿದೆ ಎಂದರು.

ಕಾನೂನು ಪ್ರಕಾರ ನದಿ ಹಾಗೂ ನದಿ ದಂಡೆ ಸರಕಾರದ ಆಸ್ತಿಯಾಗಿದೆ. ಯಾರಾದರೂ ಮನೆ ಕಟ್ಟಿದರೆ ಅಥವಾ ಸಾಗುವಳಿ ಮಾಡುವುದು ಅತಿಕ್ರಮಣ ಎಂದು ಭಾವಿಸಲಾಗುತ್ತದೆ. ಮನೆ ಕಟ್ಟಿರುವ ಬಡವರಿಗೆ ನಿರಾಶ್ರಿತರು ಎಂದು ಪರಿಗಣಿಸಿ ಪುನರ್ವಸತಿ ಕಲ್ಪಿಸಬಹುದು. ಇದರಿಂದ ಕಾನೂನು ತೊಡಕು ಎದುರಾಗುವುದನ್ನು ತಪ್ಪಿಸಬಹುದು. ಡ್ರೋನ್ ಮತ್ತಿತರ ಸೌಲಭ್ಯ ಬಳಸಿಕೊಂಡು ವೈಜ್ಞಾನಿಕವಾಗಿ ಒತ್ತುವರಿ ಸಮೀಕ್ಷೆ ನಡೆಸಬೇಕಿದೆ. ಒತ್ತುವರಿ ತೆರವು ಜತೆಗೆ ನದಿಯ ಹೂಳೆತ್ತುವ ಕೆಲಸಕ್ಕೆ ಆದ್ಯತೆ ನೀಡಬೇಕಿದೆ ಎಂದು ಬಿಸ್ವಾಸ್ ವಿವರಿಸಿದರು.

ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಜಿ.ಪಂ.ಸಿಇಒ ದರ್ಶನ್ ಎಚ್.ವಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News