ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲ: ಸಲೀಂ ಅಹಮದ್

Update: 2020-09-20 16:24 GMT

ಬೆಂಗಳೂರು, ಸೆ. 20: ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಟೆಸ್ಟ್ ಗಳನ್ನು ಹೆಚ್ಚು ಮಾಡಿದಲ್ಲಿ ಹೆಚ್ಚು ಜನರಿಗೆ ಕೋವಿಡ್ ಇರುವುದು ಗೊತ್ತಾಗುತ್ತದೆ. ಇದರಿಂದ ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎನ್ನುವ ದುರುದ್ದೇಶದಿಂದ ಟೆಸ್ಟ್ ಗಳನ್ನು ಸರಿಯಾಗಿ ಮಾಡಲಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.

ರವಿವಾರ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜಲಗಂಗಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಆರೋಗ್ಯ ಹಸ್ತ ಹಾಗೂ ಅರೋಗ್ಯ ಹಸ್ತ ಸ್ವಯಂ ಸೇವಕರುಗಳಿಗೆ ಕೋವಿಡ್-19 ತಪಾಸಣೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸಲು ಕೆಪಿಸಿಸಿ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಆರೋಗ್ಯ ಹಸ್ತ ವಿನೂತನ ಕಾರ್ಯಕ್ರಮ ಅಧಿಕಾರ ಇಲ್ಲದೇ ಇದ್ದರೂ ನಾವು ಜನರ ಮನೆ ಮನೆಗೆ ಹೋಗಿ ಟೆಸ್ಟ್ ಮಾಡುತ್ತಿದ್ದೇವೆ. ನಿರಂತರವಾಗಿ ಜನರ ಪರವಾಗಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಈ ಸರಕಾರಕ್ಕೆ ಸಂಪೂರ್ಣ ಬೆಂಬಲ ಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳನ್ನು ಗಣನೆಗೆ ತಗೆದುಕೊಳ್ಳದೆ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಕೊರೋನ ನಿರ್ವಹಣೆಯಲ್ಲಿ ವಿಫಲವಾಗಿದೆ. ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸುವಲ್ಲಿ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಅಮೆರಿಕದಲ್ಲಿ 10 ಲಕ್ಷ ಜನರಲ್ಲಿ 1.15 ಲಕ್ಷ ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಆದರೆ, ಭಾರತದಲ್ಲಿ ಕೇವಲ 11 ಸಾವಿರ ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಬಡ ಜನರಿಗೆ ಸರಿಯಾದ ಸಮಯಕ್ಕೆ ಪರೀಕ್ಷೆ ಮಾಡಿಸಿಕೊಳ್ಳಲಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಲ್ಲೇಶ್ವರಂ ಕ್ಷೇತ್ರದ ಮುಖಂಡ ಶ್ರೀಪಾದ ರೇಣು ಮಾತನಾಡಿ, ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯಲ್ಲಿ 60 ಜನ ಸ್ವಯಂ ಸೇವಕರುಗಳು ಮನೆ ಮನೆಗೆ ತೆರಳಿ ಕೋವಿಡ್-19 ತಪಾಸಣೆಯನ್ನು ನಡೆಸಲಿದ್ದಾರೆ. ಇಂದು ಅವರಿಗೆ ಅಗತ್ಯ ತರಬೇತಿಯನ್ನು ವೈದ್ಯರು ನೀಡಲಿದ್ದಾರೆ. ಈ ತರಬೇತಿಯ ನಂತರ ಅಗತ್ಯವಿರುವ ಎಲ್ಲಾ ಜನರಿಗೂ ಸೇವೆಯನ್ನು ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು. ಇದೇ ವೇಳೆ ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ 2 ಲಕ್ಷ ರೂ.ದೇಣಿಗೆಯನ್ನೂ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News