ಬೆಳ್ತಂಗಡಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ : ರಂಜನ್ ಗೌಡ ಆರೋಪ
ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಯಾವುದೇ ನಿಯಂತ್ರಣವಿಲ್ಲದೆ ನಡೆಯುತ್ತಿದ್ದು, ಇದಕ್ಕೆ ತಾಲೂಕಿನ ಅಧಿಕಾರಿಗಳು ಬೆಂಬಲ ನೀಡುತ್ತಿದ್ದಾರೆ. ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ ಒತ್ತಾಯಿಸಿದ್ದಾರೆ.
ಬೆಳ್ತಂಗಡಿ ಯಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಅನುಮತಿಯಿಲ್ಲದೆ ಯಂತ್ರಗಳನ್ನು ಬಳಸಿ ಭಾರೀ ಪ್ರಮಾಣದ ಮರಳು ಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಮನೆ ಕಟ್ಟುವವರು ಒಂದು ಪಿಕಪ್ ಮರಳು ತೆಗೆದರೆ ತಕ್ಷಣ ದಾಳಿ ನಡೆಸುವ ಅಧಿಕಾರಿಗಳಿಗೆ ಇದು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು. ಅನಧಿಕೃತ ಮರಳು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದರು.
ಸರಕಾರಿ ಅಧಿಕಾರಿಗಳೇ ಬ್ಯಾನರ್ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ನಿಡ್ಲೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಬಿಜೆಪಿಯ ಚಿಹ್ನೆಯಿರುವ ಬ್ಯಾನರ್ ಹಾಕಿದ ಬಗ್ಗೆ ಸ್ಥಳೀಯ ಕಾಂಗ್ರಸ್ ಕಾರ್ಯಕರ್ತರು ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ್ದಾರೆ ಅವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸರಕಾರಿ ಅಧಿಕಾರಿಗಳೆ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡರೆ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರಸ್ ಸಮಿತಿ ಸದಸ್ಯ ಕೇಶವ ಗೌಡ ಬೆಳಾಲು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ಪ್ರವೀಣ್ ಬಿ.ಜಿ, ದಯಾನಂದ ಬೆಳಾಲು, ಗಿರೀಶ್ ಕೆ.ಎಂ ನಿಡ್ಲೆ ಹಾಗೂ ರವಿಶಂಕರ ಕಾರಂತ್ ಇದ್ದರು.