ಮಂಗಳೂರು : ಅಗಲಿದ ಬಿಜೆಪಿ ನಾಯಕ ಸುರೇಶ್ ಅಂಗಡಿಯವರಿಗೆ ಶ್ರದ್ಧಾಂಜಲಿ

Update: 2020-09-24 08:03 GMT

ಮಂಗಳೂರು, ಸೆ.24: ಬಿಜೆಪಿಯ ಪ್ರಮುಖ ನಾಯಕ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೋನದಿಂದ ಬುಧವಾರ ನಿಧನರಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ಶ್ರದ್ಧಾಂಜಲಿ ಅರ್ಪಿಸಲಾಯಿತು.

ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷ ಸಿದ್ಧಾಂತಕ್ಕೆ ಬದ್ಧರಾಗಿ ಎಲ್ಲರೊಂದಿಗೆ ಆತ್ಮೀಯರಾಗಿ ಬೆರೆಯುತ್ತಿದ್ದ ಅಂಗಡಿಯವರು ಸಮರ್ಪಿತ ಭಾವದಿಂದ ಕೆಲಸ ಮಾಡುತ್ತಿದ್ದವರು. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದರು.

ರೈಲ್ವೆ ಸಚಿವರಾಗಿ ಅವರು ಮಾಡಿದ ಕಾರ್ಯವನ್ನು ಜನತೆ ಎಂದೂ ಮರೆಯಲು ಸಾಧ್ಯವಿಲ್ಲ. ಮಂಗಳೂರು ಭಾಗದ ರೈಲ್ವೆಯ ಹಲವಾರು ಸಮಸ್ಯೆಗಳನ್ನು ಅವರು ಮುಂದೆ ನಿಂತು ಬಗೆಹರಿಸಿದ್ದರು. ಮಂಗಳೂರು-ಬೆಂಗಳೂರು ನಡುವೆ ರೈಲು ಓಡಾಟದಲ್ಲೂ ಅವರ ಕೊಡುಗೆ ದೊಡ್ಡದು. ಅವರ ಕಾರ್ಯವೈಖರಿಯಿಂದಲೇ ಜನತೆಯ ಮನದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.

ಮಗು ಹೃದಯದ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅವರು ನನಗೆ ಹಿರಿಯಣ್ಣನಾಗಿದ್ದರು. ಈ ಭಾಗದ ರೈಲ್ವೆಯ ಹಲವಾರು ಬೇಡಿಕೆಗಳನ್ನು ಇಟ್ಟಾಗ ಸಕರಾತ್ಮಕವಾಗಿಯೇ ಸ್ಪಂದಿಸಿದ್ದರು. ಮುತುವರ್ಜಿ ವಹಿಸಿ ಹತ್ತಾರು ಬೇಡಿಕೆಗಳನ್ನು ಈಡೇರಿಸಿದ್ದರು ಎಂದು ಸಂಸದರು ಅಂಗಡಿಯವರ ಕಾರ್ಯವೈಖರಿಯನ್ನು ನೆನಪಿಸಿಕೊಂಡರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮೇಯರ್ ದಿವಾಕರ ಪಾಂಡೇಶ್ವರ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಾರ್ಪೋರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News