ಕರ್ನಾಟಕ ಬಂದ್: ಉಡುಪಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ

Update: 2020-09-28 03:20 GMT

ಉಡುಪಿ, ಸೆ.28: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

 ಬಂದ್ ಕರೆ ಕೊಟ್ಟರೂ ಸರ್ವಿಸ್ ಮತ್ತು ಸಿಟಿ ಬಸ್ಸುಗಳು ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿರುವುದರಿಂದ ಬಂದ್ ಬೆಂಬಲ ಕೊಟ್ಟ ವಿವಿಧ ಸಂಘಟನೆಯವರು ಬಸ್ ಸಂಚಾರ ನಡೆಸದಂತೆ ಮನವಿ ಮಾಡಿದರೆನ್ನಲಾಗಿದೆ.

ಈ ಸಂದರ್ಭ ಬಸ್ ನಿರ್ವಾಹಕರು ಮತ್ತು ಚಾಲಕರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಸ್ ಸಂಚಾರ ಮುಂದುವರಿಸುವುದಾಗಿ ಪಟ್ಟು ಹಿಡಿದ ಚಾಲಕರ ಹಾಗೂ ನಿರ್ವಾಹಕರ ಧೋರಣೆ ವಿರೋಧಿಸಿ ಪ್ರತಿಭಟನಾಕಾರರು ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ನಡೆಸದಂತೆ ರಸ್ತೆ ತಡೆ ನಡೆಸಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಸಿಪಿಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್, ನಗರಸಭಾ ಸದಸ್ಯ ರಮೇಶ್ ಕಾಂಚನ್, ದಸಂಸ ಮುಖಂಡ ಸುಂದರ್ ಮಾಸ್ಟರ್, ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಆರ್.ಕೆ.ರಮೇಶ್, ವೆಲ್ಫೇರ್ ಪಾರ್ಟಿಯ ಜಿಲ್ಲಾಧ್ಯಕ್ಷ  ಅಬ್ದುಲ್ ಅಝೀಝ್ ಉದ್ಯಾವರ, ಅನ್ನದಾತ ಆಟೋ ಯೂನಿಯನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೂಡಬೆಟ್ಟು, ವಿವಿಧ ಸಂಘಟನೆಗಳ ಮುಖಂಡರಾದ ಸಾಯಿರಾಜ್ ಕೋಟ್ಯಾನ್, ಧನುಷ್ ಶೆಟ್ಟಿ, ಅಬ್ದುಲ್ ರಹ್ಮಾನ್, ಹಮೀದ್ ಸೇರಿದ್ದಾರೆ.

ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಸರ್ವಿಸ್ ಹಾಗೂ ಸಿಟಿ ಬಸ್ ಗಳ ಸಂಚಾರ ಮುಂದುವರಿದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News