ಮೈಸೂರು: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ

Update: 2020-09-29 06:52 GMT

ಮೈಸೂರು : ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಇಂದು ಬೆಳಗ್ಗೆ ಮೈಸೂರಿಗೆ ಆಗಮಿಸಿದ ಅವರು ಮೊದಲಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ದರ್ಶನ ಪಡೆದು ಉತ್ತನಹಳ್ಳಿಯಲ್ಲಿರುವ ಜ್ವಾಲಾಮುಖಿ ಅಮ್ಮನವರ ದರ್ಶನ ಪಡೆದು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಎಡಿಸಿ ಮಂಜುನಾಥ್ ಅವರಿಂದ ಅಧಿಕಾರ ಸ್ವೀಕರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ನನ್ನನ್ನು ನೇಮಕ ಮಾಡಿರುವುದು ಸಂತಸ ತಂದಿದೆ. ನನಗೆ ಎರಡು ಮಹತ್ತರ ಜವಾಬ್ದಾರಿಗಳು ಎದುರಾಗಿದ್ದು ಮೊದಲಿಗೆ ಕೋವಿಡ್ ನಿಯಂತ್ರಣ ಸವಾಲಾಗಿದೆ. ಬೆಂಗಳೂರು ಬಿಟ್ಟರೆ ಮೈಸೂರು ಅತೀ ಹೆಚ್ಚು ಕೊರೋನ ಸೋಂಕಿತರನ್ನು ಹೊಂದಿದೆ. ಅದನ್ನು ಹತೋಟಿಗೆ ತರಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದಕ್ಕೆ ಮೊದಲ ಆದ್ಯತೆ ನೀಡಿ ನಂತರ ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ಸಿಗೆ ಶ್ರಮಿಸುವುದಾಗಿ ಹೇಳಿದರು.

ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ವೇಳೆ ಗೋಮಟೇಶ್ವರ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಹಾಗಾಗಿ ದಸರಾ ಆಚರಣೆಯನ್ನು ಉತ್ತಮವಾಗಿ ನಿಭಾಯಿಸುವುದಾಗಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News