ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

Update: 2020-09-29 12:09 GMT

ಬೆಂಗಳೂರು, ಸೆ.29: ದರೋಡೆ, ಕಳವು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಮೂವರನ್ನು ಬಂಧಿಸುವಲ್ಲಿ ಉಪ್ಪಾರಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಜೆಜೆ.ನಗರದ ಅಫ್ಝಲ್ ಪಾಷ(24), ಅಫ್ರಿದ್ ಖಾನ್(23) ಹಾಗೂ ಆಂಧ್ರಪ್ರದೇಶದ ಪ್ರವೀಣ್ ಕುಮಾರ್(28) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಆರೋಪಿ ಅಫ್ಝಲ್ ಪಾಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ನೀಡಿದ ಮಾಹಿತಿಯನ್ವಯ ಇನ್ನಿಬ್ಬರನ್ನು ಬಂಧಿಸಲಾಗಿದೆ.

ಕೆಂಪೇಗೌಡ ರಸ್ತೆಯ ಎಫ್‍ಕೆಸಿಸಿಐ ಮುಂಭಾಗ ವ್ಯಕ್ತಿಯೊಬ್ಬರು ನಡೆದುಕೊಂಡು ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ತೋರಿಸಿ ಬೆದರಿಸಿ ಅವರ ಮೊಬೈಲ್ ಕಿತ್ತು ಪರಾರಿಯಾಗಿದ್ದರು. ಈ ಬಗ್ಗೆ ಮೊಬೈಲ್ ಕಳೆದುಕೊಂಡ ವ್ಯಕ್ತಿ ಉಪ್ಪಾರ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News