ಉಪ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು, ಸೆ. 30: ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಈ ಕ್ಷೇತ್ರಗಳಿಗೆ ಪಕ್ಷದ ಪರವಾಗಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎರಡೂ ಕಡೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ(ಜೆಡಿಎಸ್) ಸೇರಿದಂತೆ ಇನ್ನಿತರ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೆ ಇಲ್ಲ. ಶಿರಾ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದಿಂದ ಟಿ.ಬಿ.ಜಯಚಂದ್ರ ಅಭ್ಯರ್ಥಿಯಾಗಲಿದ್ದು, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಪ್ರತಿ ಕ್ಷೇತ್ರಕ್ಕೆ ಹತ್ತಿಪ್ಪತ್ತು ಮಂದಿ ಸ್ಪರ್ಧಿಸಲು ಆಕಾಂಕ್ಷಿಗಳಾಗಿದ್ದು, ಶೀಘ್ರವೇ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ' ಎಂದರು.
`ದೇಶದಲ್ಲಿ ನಿತ್ಯ ದಾಖಲಾಗುತ್ತಿರುವ ಒಟ್ಟು ಕೊರೋನ ವೈರಸ್ ಸೋಂಕಿತರ ಪ್ರಮಾಣದಲ್ಲಿ ಶೇ.15ರಷ್ಟು ಕರ್ನಾಟಕವೊಂದರಲ್ಲೇ ದಾಖಲಾಗುತ್ತಿದೆ. ರಾಜ್ಯ ಸರಕಾರ ಕೊರೋನ ಸೋಂಕು ನಿಯಂತ್ರಿಸಲಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸುವ ಬದಲು ರಾಜೀನಾಮೆ ನೀಡಿ ಮನೆಗೆ ಹೋಗಲಿ. ಇಂಥವರು ಇದ್ದು ಮಾಡುವುದಾದರೂ ಏನು?' ಎಂದು ಆಕ್ರೋಶ ಹೊರಹಾಕಿದರು.
`ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಈಗಿರುವ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ತಾಲೂಕು ಕೇಂದ್ರಗಳಿಗೆ ಸೀಮಿತವಾಗಿರುವ ಎಪಿಎಂಸಿ ಮಾರುಕಟ್ಟೆಯನ್ನು ಪ್ರತೀ ಗ್ರಾಮ ಪಂಚಾಯತಿಗೂ ವಿಸ್ತರಿಸುವುದಾಗಿ ಹೇಳಿತ್ತು. ಬಿಜೆಪಿಯವರು ನಮ್ಮ ಪ್ರಣಾಳಿಕೆಯ ಆಯ್ದ ಭಾಗವನ್ನು ಮಾತ್ರ ಜನರಿಗೆ ತೋರಿಸಿ, ದಾರಿ ತಪ್ಪಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಇದೇ ವೇಳೆ ವಾಗ್ದಾಳಿ ನಡೆಸಿದರು.
`ಎಪಿಎಂಸಿ ಕಾಯಿದೆ ಹಾಗೂ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳು ಮೇಲ್ಮನೆಯಲ್ಲಿ ಚರ್ಚೆಗೆ ಬರಲೇ ಇಲ್ಲ, ಇನ್ನು ಕಾರ್ಮಿಕ ಕಾಯ್ದೆ ಪರ ಬಹುಮತವೇ ಇಲ್ಲ. ಹೀಗಾಗಿ ಈ ಕಾಯ್ದೆಗಳ ಜಾರಿಗೆ ಮತ್ತೊಮ್ಮೆ ಅಧ್ಯಾದೇಶ (ಸುಗ್ರೀವಾಜ್ಞೆ) ಹೊರಡಿಸಬೇಕು. ಈಗಿನ್ನೂ ಹೋರಾಟದ ಕಿಚ್ಚು ಆರಂಭವಾಗಿದೆ, ಇದು ಇಲ್ಲಿಗೆ ನಿಲ್ಲುವುದಿಲ್ಲ' ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
`ಬಿಜೆಪಿ ಸರಕಾರೇತರ ರಾಜ್ಯಗಳಲ್ಲಿ ಕೊಲೆ, ಅತ್ಯಾಚಾರಗಳಾದಾಗ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸಿ ಅದನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಬಿಜೆಪಿಯವರೇನಾದ್ರೂ ಅಲ್ಲಿನ ಸರಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದರೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
`ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳನ್ನೊಳಗೊಂಡ, ರಾಜಗೊಂಡ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರಿಸುವಂತೆ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಶಿಫಾರಸ್ಸು ಮಾಡಿ ಕೇಂದ್ರ ಸರಕಾರಕ್ಕೆ ಕಳಿಸಿಕೊಟ್ಟಿದ್ದೆ. ಸಚಿವ ಕೆ.ಎಸ್.ಈಶ್ವರಪ್ಪನವರು ಮೊದಲು ಈ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಲಿ, ಆಮೇಲೆ ಬೇರೆ ಮಾತು' ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಯಡಿಯೂರಪ್ಪನವರ ಕುಟುಂಬ ಭಾಗಿಯಾಗಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಿ. ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ'
-ಸಿದ್ದರಾಮಯ್ಯ, ವಿಪಕ್ಷ ನಾಯಕ