ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಿದರೆ ಆಯೋಜಕರ ವಿರುದ್ಧ ಕ್ರಮ: ಸಚಿವ ಸುಧಾಕರ್

Update: 2020-09-30 14:55 GMT

ಬೆಂಗಳೂರು, ಸೆ.30: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರ ಬೀಳಲಿದೆ, ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ದಂಡ ಅನ್ವಯವಾಗಲಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲು ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ಮಾರುಕಟ್ಟೆ, ಮಾಲ್, ಇತರೆ ಸಾರ್ವಜನಿಕ ಸ್ಥಳದಲ್ಲಿ 5 ಕ್ಕೂ ಹೆಚ್ಚು ಜನ ಗುಂಪುಗೂಡಿ ನಿಲ್ಲುವಂತಿಲ್ಲ. ಇವರ ನಡುವೆ ಕನಿಷ್ಠ 6 ಅಡಿ ಅಂತರವಿರಬೇಕು. ಇಲ್ಲವಾದರೆ ಆ ಸಂಸ್ಥೆ ಮಾಲಕರಿಗೆ ದಂಡ ಪ್ರಯೋಗ ಮಾಡಲಾಗುವುದು ಎಂದು ಅವರು ಹೇಳಿದರು.

ಕೊರೋನ ಜಾಗೃತಿ ಸಂಬಂಧ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಯೋಜನೆ ರಚಿಸಲಾಗಿದೆ. ರಾಜಕಾರಣಿಗಳು, ಕ್ರೀಡೆ, ಸಿನಿ ತಾರೆಯರು, ಧಾರ್ಮಿಕ ಗುರುಗಳ ಮೂಲಕ ಮಾಸ್ಕ್ ಬಗ್ಗೆ ಕೊರೋನ ನಿಯಂತ್ರಣ ಮಾಡುವ ಸಣ್ಣ ತುಣುಕುಗಳನ್ನು ವಿಡಿಯೋ ಮೂಲಕ ತಲುಪಿಸಲು ಕ್ರಮ. ಜೊತೆಗೆ ಸ್ವಯಂ ಸೇವಾ ಸಂಘಟಕರು, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ವೆಲ್‍ಫೇರ್ ಅಸೋಸಿಯೇಷನ್ ಎಲ್ಲರೂ ಸರಕಾರದೊಂದಿಗೆ ಕೈ ಜೋಡಿಸಿದರೆ ನಿರ್ವಹಣೆ ಹೆಚ್ಚು ಪ್ರಬಲವಾಗಿ ಮಾಡಬಹುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಒಟ್ಟು 15 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುತ್ತಿದೆ, ಈ ಪೈಕಿ ಇಂದು ಮೈಸೂರು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ ಮತ್ತು ಕೊಪ್ಪಳ ಏಳು ಜಿಲ್ಲಾಧಿಕಾರಿ, ಡಿಎಚ್‍ಒ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಪಾಸಿಟಿವ್ ಪ್ರಮಾಣವನ್ನು ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ನೀಡಿದ್ದೇವೆ ಎಂದು ಸುಧಾಕರ್ ತಿಳಿಸಿದರು.

ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳ ಜೊತೆ ಸಭೆ ನಡೆಸಲಾಗುವುದು. ಶೇ.17 ರಷ್ಟು ಪಾಸಿಟಿವ್ ಪ್ರಮಾಣ ಮೈಸೂರಿನಲ್ಲಿದ್ದು ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಸಾರಿಗೆ ವ್ಯವಸ್ಥೆಯಾದ ಬಸ್‍ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಸಲು ಅವಕಾಶವಿದೆ, ಮಾಸ್ಕ್ ಇಲ್ಲದವರನ್ನು ಬಸ್ ಒಳಗೆ ಪ್ರವೇಶ ನೀಡದಂತೆ ಕಂಡೆಕ್ಟರ್ ಗಳಿಗೆ ಸೂಚಿಸಲಾಗುವುದು ಎಂದು ಅವರು ಹೇಳಿದರು.

ಎಲ್ಲ ಸರಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶ ವಿರುವುದಿಲ್ಲ. ಇದನ್ನು ಅತ್ಯಂತ ಕಠಿಣ ಹಾಗೂ ಶಿಸ್ತಾಗಿ ಪಾಲನೆ ಮಾಡಲಾಗುತ್ತೆ ಎಂದು ಸುಧಾಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News