ಬೆಳಗಾವಿ ಉಪ ಚುನಾವಣೆಯಲ್ಲಿ ಜಾತಿ, ಸಮುದಾಯಕ್ಕಿಂತಲೂ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

Update: 2020-10-01 13:52 GMT

ಬೆಳಗಾವಿ, ಅ.1: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಾತಿ, ಸಮುದಾಯಕ್ಕಿಂತಲೂ ಗೆಲ್ಲುವ ಅಭ್ಯರ್ಥಿಗೆ ಪಕ್ಷದ ಟಿಕೆಟ್ ಕೊಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಗುರುವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪ ಚುನಾವಣೆಯಲ್ಲಿ ನಿಲ್ಲುವ ಆಕಾಂಕ್ಷಿಗಳು ಸಾಕಷ್ಟು ಮಂದಿ ಇದ್ದಾರೆ. ಆದರೆ, ಈ ಬಗ್ಗೆ ಇನ್ನೂ ಚರ್ಚೆ ಆರಂಭವಾಗಿಲ್ಲ. ಹದಿನೈದು ದಿನಗಳಲ್ಲಿ ಮುಖಂಡರ ಸಭೆ ಕರೆದು ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ಶಿರಾ ಹಾಗೂ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತೇವೆ. ಶಿರಾದಲ್ಲಿ ಪಕ್ಷದ ಆಂತರಿಕ ಸಮಸ್ಯೆಯಿಂದ ಹೋದ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ಈಗ ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ವಿಧಾನಮಂಡಲ ಅಧಿವೇಶನದಲ್ಲಿ ಬೆಳಗಾವಿ ಪ್ರವಾಹದ ಬಗ್ಗೆ ಚರ್ಚೆ ನಡೆದರೂ ಸರಕಾರ ಯಾವುದೇ ಉತ್ತರವನ್ನು ನೀಡಿಲ್ಲ. ಈ ವಿಷಯವನ್ನು ಜನರ ಮುಂದಿಡುತ್ತೇವೆ. ಅ.2ರಂದು ಘಟಪ್ರಭಾದ ಕಾಂಗ್ರೆಸ್ ಸೇವಾದಳ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ನಗರದಲ್ಲಿ ನಿರ್ಮಿಸಿರುವ ಕಾಂಗ್ರೆಸ್ ಭವನದ ಉದ್ಘಾಟನೆಯನ್ನೂ ನೆರವೇರಿಸುವರು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News