ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ: ಕುಮಾರಸ್ವಾಮಿ

Update: 2020-10-01 13:55 GMT

ಬೆಂಗಳೂರು, ಅ. 1: `ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ಪಿ ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‍ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ' ಎಂದು ತಿರುಗೇಟು ನೀಡಿದ್ದಾರೆ.

`ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‍ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ' ಎಂದು ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News