ಮೋದಿ ಸರಕಾರದಿಂದ ವಿಪಕ್ಷಗಳ ಧ್ವನಿ ಅಡಗಿಸುವ ಯತ್ನ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್
Update: 2020-10-05 12:42 GMT
ಬೆಂಗಳೂರು, ಅ.5: ನರೇಂದ್ರ ಮೋದಿ ಸರಕಾರ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಕಾರ್ಯವನ್ನು ಐಟಿ, ಈಡಿ, ಸಿಬಿಐ ಸಂಸ್ಥೆಗಳ ಮೂಲಕ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ಕೇಂದ್ರ ಸರಕಾರದ ಸಂಸ್ಥೆಗಳಿಂದ ದಾಳಿ ನಡೆಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಮನೆ ಮೇಲಿನ ದಾಳಿ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ನಾಯಕತ್ವಕ್ಕೆ ಬೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಇಂತಹ ನೀಚ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನರೇಂದ್ರ ಮೋದಿಯವರೇ, ನಿಮಗೆ ನೈತಿಕತೆಯಿದ್ದರೆ ಮೊದಲು ಬಿ.ಎಸ್.ವೈ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.