×
Ad

ಪರೀಕ್ಷಾ ಕೇಂದ್ರದಲ್ಲಿ ಕೊರೋನ ಮುಂಜಾಗೃತಾ ಕ್ರಮ ಪಾಲಿಸಿ : ಅಪರ ಜಿಲ್ಲಾಧಿಕಾರಿ

Update: 2020-10-09 20:05 IST

ಉಡುಪಿ, ಅ.9: ಇದೇ ಅ.13 ಹಾಗೂ 14ರಂದು ನಡೆಯಲಿರುವ ಡಿಪ್ಲೋಮಾ ಹಾಗೂ ಪಿಜಿಸಿಇಟಿ ಪರೀಕ್ಷೆಯ ವೇಳೆ ಕೋವಿಡ್ ಸೋಂಕು ತಡೆಗೆ ಸರಕಾರ ಹೊರಡಿಸಿರುವ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ದಾಶಿವ ಪ್ರಭು ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಡಿಪ್ಲೋಮಾ ಮತ್ತು ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವ ಈ ಸಮಯದಲ್ಲಿ ನಡೆಯು ತ್ತಿರುವ ಪರೀಕ್ಷೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿರುವ ಅನುಭವವಿದ್ದು, ಅದೇ ರೀತಿಯಲ್ಲಿ ಈ ಪರೀಕ್ಷೆಗಳನ್ನೂ ನಡೆಸ ಬೇಕು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕೆಂದು ತಿಳಿಸಿದರು.

ಕೋವಿಡ್ ಪಾಸಿಟಿವ್ ಬಂದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು. ಅಲ್ಲಿ ಸಿಸಿಟಿ ಕ್ಯಾಮರಾವನ್ನು ಅಳವಡಿಸುವುದರ ಜೊತೆಗೆ ಜಿಲ್ಲಾ ಆರೋಗ್ಯ ಪ್ರಾಧಿಕಾರದಿಂದ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪರೀಕ್ಷೆ ಮುಗಿದ ನಂತರ ಪ್ರತೀದಿನ ಸಂಜೆ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಣಾ ದ್ರವಣವನ್ನು ಸಿಂಪಡಿಸಬೇಕು ಪ್ರತೀ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕಾನಿಂಗ್ ಮಾಡಬೇಕು. ಅಲ್ಲದೇ ಪ್ರತಿಯೊಬ್ಬ ವಿದ್ಯಾರ್ಥಿ ತಪ್ಪದೇ ಮುಖಗವಸು ಧರಿಸಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ: 0820-2574802 ಹಾಗೂ ಟೋಲ್ ಫ್ರೀ ಸಂಖ್ಯೆ 1077 ಗೆ ಕರೆ ಮಾಡಿದಲ್ಲಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ, ತಹಶೀಲ್ದಾರ ಪ್ರದೀಪ್ ಎಸ್ ಕುರುಡೇಕರ್, ಖಜಾನೆ ಇಲಾಖೆ ಉಪನಿರ್ದೇಶಕ ಗೋಪಾಲ ಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಬಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News