ಡಾ.ಸಿ.ಎನ್. ಮಂಜುನಾಥ್ ರಿಂದ ಈ ಬಾರಿಯ ದಸರಾ ಉದ್ಘಾಟನೆ: ಸಚಿವ ಸೋಮಶೇಖರ್

Update: 2020-10-16 16:21 GMT

ಮೈಸೂರು, ಅ.10: ಪ್ರಸಕ್ತ ಸಾಲಿನ ಮೈಸೂರು ದಸರಾವನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ.ಸಿ.ಎನ್.ಮಂಜುನಾಥ್ ಉದ್ಘಾಟಿಸುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ  ಮೈಸೂರಿನ ಪೌರ ಕಾರ್ಮಿಕೆ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಹಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತ ಅಯ್ಯೂಬ್ ಅಹ್ಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆ ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸಲಾಗುವುದು. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಹೈಪವರ್ ಕಮಿಟಿಯಲ್ಲಿ ತೀರ್ಮಾನವಾಗಿದೆ. ಕಳೆದ ಬಾರಿ ಯಾವ ರೀತಿ ಇತ್ತೋ ಅದೇ ರೀತಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ನೂರಾರು ಕಿ.ಮೀ. ದೂರ ಇರುವ ವ್ಯಾಪ್ತಿಯನ್ನು ಕಡಿತಗೊಳಿಸಿ 50 ಕಿಲೋ ಮೀಟರ್ ಗೆ ಸೀಮಿತಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕೊರೋನ ಹಿನ್ನೆಲೆ ಪಾರ್ಕಿಂಗ್ ಗೆ  ಎಲ್ಲ ಕಡೆ ಅನುಮತಿ ಕೊಡುವುದಿಲ್ಲ. ಸುರಕ್ಷತೆ ದೃಷ್ಟಿಯಿಂದ ಏನೆಲ್ಲ ಕಾರ್ಯಗಳನ್ನು ಕೈಗೊಳ್ಳಬೇಕೋ ಅದನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News