ಅತಿಥಿ ಉಪನ್ಯಾಸಕರ ಗೌರವ ಧನ ಬಾಕಿ ಬಿಡುಗಡೆಗೆ ಕುಮಾರಸ್ವಾಮಿ ಒತ್ತಾಯ

Update: 2020-10-11 12:27 GMT

ಬೆಂಗಳೂರು, ಅ. 11: `ಸರಕಾರರ ಭರವಸೆ ನೀಡಿದ್ದಂತೆ ಪದವಿ (ಡಿಗ್ರಿ) ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್‍ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದ 14 ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿದ್ದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು. ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರಕಾರ 15 ಸಾವಿರ ರೂ.ಗಳ ಮಾಸಿಕ ಗೌರವಧನ ನೀಡುವ ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು' ಎಂದು ಒತ್ತಾಯಿಸಿದ್ದಾರೆ.

ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರಕಾರ ನೆರವಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ಕುಮಾರಸ್ವಾಮಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News