ರಾಜ್ಯಾದ್ಯಂತ ಇನ್ನೂ ಐದು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2020-10-13 12:45 GMT

ಬೆಂಗಳೂರು, ಅ.13: ಮಂಗಳವಾರದಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಉತ್ತರ ಒಳನಾಡಿನಲ್ಲಿ ಅ.13, 14 ಮತ್ತು 15 ರಂದು ವ್ಯಾಪಕ ಮಳೆಯಾಗಲಿದೆ. ಅ.16 ಮತ್ತು 17 ರಂದು ಮಳೆ ಪ್ರಮಾಣ ತಗ್ಗಲಿದ್ದು, ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಮಂಗಳವಾರದಂದು ಉತ್ತರ ಕರ್ನಾಟಕದ ಪೂರ್ವ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ.

ಉತ್ತರ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ, ಗಾಳಿಯ ವೇಗ ಪ್ರತೀ ಗಂಟೆಗೆ 55 ರಿಂದ 65 ಕಿ.ಮೀ ಇದೆ. ಇನ್ನೊಂದೆಡೆ ಪೂರ್ವ ಪಶ್ಚಿಮವಾಗಿ ಟ್ರಫ್ ನಿರ್ಮಾಣವಾಗಿದೆ. ಇವುಗಳ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 13 ರಿಂದ 14 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಅ. 16 ಮತ್ತು 17 ರಂದು ಕೂಡ ಮಳೆ ಮುಂದುವರಿಯಲಿದೆ. ಮಂಗಳವಾರ ಮತ್ತು ಬುಧವಾರ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಅ.15 ರಂದು ಯಲ್ಲೋ ಅಲರ್ಟ್ ನೀಡಲಾಗಿದೆ

ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಅ. 13 ಮತ್ತು 15 ರಂದು ವ್ಯಾಪಕ ಮಳೆಯಾಗಲಿದ್ದು, ಅ. 17 ರವರೆಗೆ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಅ.13ರಂದು ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಹಾಗೂ ಅ.14ರಂದು ಯಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಮಾನ್ಸೂನ್ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದ್ದು, ಬಾದಾಮಿಯಲ್ಲಿ 8 ಸೆಂ.ಮೀ, ಸುಬ್ರಹ್ಮಣ್ಯ, ಆಗುಂಬೆಯಲ್ಲಿ 7 ಸೆಂ.ಮೀ ಮಳೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News