×
Ad

ಮಳೆಹಾನಿ ಸಂತ್ರಸ್ಥರಿಗೆ ಶೀಘ್ರವೇ ಪರಿಹಾರ ನೀಡಿ: ಉಡುಪಿ ಜಿಲ್ಲಾಧಿಕಾರಿ

Update: 2020-10-15 21:24 IST

ಉಡುಪಿ, ಅ.15: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ತ್ವರಿತ ಗತಿಯಲ್ಲಿ ಪರಿಶೀಲಿಸಿ ನಷ್ಟವನ್ನು ಅಂದಾಜಿಸುವುದರೊಂದಿಗೆ, ಸರಕಾರದ ಮಾರ್ಗಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ವಿತರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ ಕಚೇರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಈವರೆಗೆ 5040 ಮಿ.ಮೀ. ಮಳೆಯಾಗಿದ್ದು ಇದು ವಾಡಿಕೆ ಮಳೆಗಿಂತ ಶೇ.16ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಈವರೆಗೂ ರಸ್ತೆ, ಸೇತುವೆ, ಕೃಷಿ, ತೋಟಗಾರಿಕೆ ಬೆಳೆ, ಮನೆಗಳಿಗಾದ ಹಾನಿ ಸೇರಿದಂತೆ ಒಟ್ಟಾರೆಯಾಗಿ ಅಂದಾಜು 334.2 ಕೋಟಿ ರೂ.ನಷ್ಟು ಹಾನಿ ಯಾಗಿದೆ ಎಂದವರು ಹೇಳಿದರು.

ಮುಂದಿನ ದಿನಗಳಲ್ಲಿ ತೀವ್ರತರವಾಗಿ ಮಳೆ ಬಂದು ಹಾನಿಗೊಳಗಾದಾಗ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಗ್ರಾಪಂ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರೂ ಸಹ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಉಡುಪಿ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಿಂದಾಗಿ ತಗ್ಗು ಪ್ರದೇಶ ಗಳಲ್ಲಿರುವ ಮನೆಗಳು ಮುಳುಗಿದ್ದು, ಇವುಗಳನ್ನು ಗುರುತಿಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲ ವಾಗುತ್ತದೆ.ನೀರಿನ ಹರಿವು ಸರಾಗವಾಗಿರುವಂತೆ ನಾಲಾಗಳು ಸುವ್ಯವಸ್ಥೆಯಲ್ಲಿ ರುವಂತೆ ನೋಡಿಕೊಳ್ಳಬೇಕು. ಒತ್ತುವರಿಯಾಗಿರುವ ಬಗ್ಗೆಯೂ ಪರಿಶೀಲಿಸು ವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಕಳೆದ ತಿಂಗಳು ಮಳೆಯಿಂದಾಗಿ ತೊಂದರೆಗೊಳಗಾದ ಜನರ ರಕ್ಷಣಾ ಕಾರ್ಯವನ್ನು ಅಧಿಕಾರಿಗಳು, ಮೀನುಗಾರರು, ಸ್ವಯಂಸೇವಕರು ಉತ್ತಮವಾಗಿ ನಿರ್ವಹಿಸಿದ್ದಾರೆ. 800ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ಪ್ರವಾಹದಿಂದ ರಕ್ಷಿಸುವಕಾರ್ಯ ನಡೆಸಿದ್ದು, ಇವರಿಗೆ ಜಿಲ್ಲಾಡಳಿತ ದಿಂದ ಅಭಿನಂದನೆಗಳನ್ನು ತಿಳಿಸಿದರು.

ಅಗ್ನಿಶಾಮಕ ದಳಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಬೋಟ್‌ಗಳನ್ನು ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಹಾಗೂ ತರಬೇತಿ ಯನ್ನೂ ಸಹ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನುಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News