ಗ್ರಾಪಂ ಚುನಾವಣೆ ವರ್ಷಾಂತ್ಯದೊಳಗೆ ನಡೆಸುವುದು ಸೂಕ್ತ: ಹೈಕೋರ್ಟ್ ಗೆ ಸ್ಪಷ್ಟ ನಿಲುವು ತಿಳಿಸಿದ ಆಯೋಗ
ಬೆಂಗಳೂರು, ಅ.16: ಅವಧಿ ಮುಗಿದಿರುವ ಗ್ರಾಮ ಪಂಚಾಯತ್ ಗಳಿಗೆ ವರ್ಷಾಂತ್ಯದೊಳಗೆ ಚುನಾವಣೆ ನಡೆಸುವುದು ಎಲ್ಲ ರೀತಿಯಿಂದಲೂ ಸೂಕ್ತ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಅವಧಿ ಮುಗಿದಿರುವ ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿ, ಗ್ರಾಮ ಪಂಚಾಯತ್ಗಳಿಗೆ ಈಗಾಗಲೇ ಸಿದ್ಧಪಡಿಸಿರುವ ವೇಳಾಪಟ್ಟಿಯಂತೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಉದ್ದೇಶಿಸಿದೆ ಎಂದು ಚುನಾವಣಾ ಆಯೋಗದ ನಿಲುವನ್ನು ಸ್ಪಷ್ಟಪಡಿಸಿದರು. ಹಾಗೆಯೇ, ಗ್ರಾಪಂಗಳಿಗೆ ವರ್ಷಾಂತ್ಯದೊಳಗೆ ಚುನಾವಣೆ ನಡೆಸುವುದು ಎಲ್ಲ ರೀತಿಯಲ್ಲೂ ಸೂಕ್ತ. ಮುಂದೆ ಬಿಬಿಎಂಪಿ ಸೇರಿ ಹಲವು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿರುವುದರಿಂದ ಆದಷ್ಟು ಬೇಗ ಗ್ರಾಪಂ ಚುನಾವಣೆಗಳನ್ನು ಮುಗಿಸಬೇಕಿದೆ ಎಂದರು.
ಅಲ್ಲದೇ, ರಾಜ್ಯ ಸರಕಾರ ಎರಡನೆ ಬಾರಿಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಗ್ರಾಪಂ ಚುನಾವಣೆಗಳನ್ನು ಮುಂದೂಡುವಂತೆ ಕೋರಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳೂ ಪತ್ರ ಬರೆದು ಚುನಾವಣೆ ಮುಂದೂಡಲು ಕೋರಿವೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು ಗ್ರಾಪಂ ಚುನಾವಣೆ ರಾಜಕೀಯ ಪಕ್ಷಗಳ ಆಧಾರದಲ್ಲಿ ನಡೆಯುವುದಿಲ್ಲ. ಆದಷ್ಟು ಬೇಗ ಚುನಾವಣೆ ನಡೆಸುವುದು ಸೂಕ್ತ. ಆಯೋಗ ನಿಲುವು ಸ್ವಾಗತಾರ್ಹ ಎಂದರು. ಆದರೆ, ಈ ಸಂಬಂಧ ರಾಜ್ಯ ಸರಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪೀಠ ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.