ಕೊರೋನ ಸೋಂಕಿತರಿಂದ ದೈಹಿಕವಾಗಿಯಷ್ಟೇ ದೂರವಿರಿ, ಮಾನಸಿಕವಾಗಿಯಲ್ಲ: ಡಾ. ಮಂಜುನಾಥ್

Update: 2020-10-17 04:42 GMT

ಮೈಸೂರು, ಅ.17: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್  ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರಪಂಚ ಕೊರೋನ ಸಂಕಷ್ಟಗಳಿಂದ ಮುಕ್ತವಾಗಲಿ, ಬೇಗ ಕೊರೋನಕ್ಕೆ ಲಸಿಕೆ ಸಿಗಲಿ ಹಾಗೂ ರಾಜ್ಯವು ಈ ಸಂಕಷ್ಟದಿಂದ ಮುಕ್ತವಾಗಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಕೇಳಿಕೊಂಡಿದ್ದೇನೆ ಎಂದರು.

ಕೊರೋನ ಸೋಂಕಿನಿಂದ ಬಳಲುತ್ತಿದ್ದವರಿಗೆ ಪ್ರೀತಿ ಹಾಗೂ ಮಾನವೀಯತೆ ತೋರಬೇಕು. ಇಂದು ಕೊರೋನ ಕಾಯಿಲೆಗಿಂತ ಅದರ ಭಯದ ಕಾಯಿಲೆಯೇ ಹೆಚ್ಚುತ್ತಿದೆ. ನಾವು ಸೋಂಕಿತರಿಂದ ದೈಹಿಕವಾಗಿ ಮಾತ್ರ ದೂರವಿರಬೇಕು, ಮಾನಸಿಕವಾಗಿಯಲ್ಲ ಎಂದು ಡಾ. ಮಂಜುನಾಥ್ ತಿಳಿಸಿದರು.

ಪರಿಸರವನ್ನು ನಾವು ಬೆಳೆಸಬೇಕು. ಅದನ್ನು ಹಾಳು ಮಾಡಿದರೆ ಹೇಗೆ ಸಂಕಷ್ಟ ಎದುರಾಗುತ್ತದೆ ಎಂಬುದನ್ನು ಇಂದು ಪ್ರಕೃತಿ ತೋರಿಸುತ್ತಿದೆ. ಇದಕ್ಕಾಗಿ ನಾವು ಶುಚಿತ್ವವನ್ನು ಕಾಪಾಡಿಕೊಳ್ಳಬೇಕು, ಸ್ಯಾನಿಟೇಷನ್‌ ಮಾಡಿಕೊಳ್ಳಬೇಕು, ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಬೇಕು. ಮಾಸ್ಕ್ ಹಾಕಿಕೊಳ್ಳಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು  ಹೇಳಿದರು.

ಸಮಾಜ ಜಾಲಾಡುತ್ತಿರುವ ಸಾಮಾಜಿಕ ಜಾಲತಾಣ

ಸಾಮಾಜಿಕ ಜಾಲತಾಣಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ. ಸಮಾಜವನ್ನು ಜಾಲಾಡುತ್ತಿದೆ. ಜನರ ದಿಕ್ಕಿ ತಪ್ಪಿಸುತ್ತಿದೆ. ಕೊರೋನಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ತಪ್ಪು ಮಾಹಿತಿಗಳು ರವಾನೆಯಾಗುತ್ತಿದೆ. ಇಂಥದ್ದು ನಿಲ್ಲಬೇಕಿದ್ದು, ನೈಜ ಸುದ್ದಿಯನ್ನು ಮಾತ್ರ ರವಾನಿಸಬೇಕು ಎಂದು ಡಾ. ಮಂಜುನಾಥ್ ಮನವಿ ಮಾಡಿದರು.

ದಸರಾ ಮಹೋತ್ಸವದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಉದ್ಘಾಟನೆ ಮಾಡಲು ವೈದ್ಯರಿಗೆ ಅವಕಾಶ ಮಾಡಿಕೊಟ್ಟ ಸರಕಾರ ಹಾಗೂ ಮುಖ್ಯಮಂತ್ರಿಗೆ ಧನ್ಯವಾದಗಳು. ಈ ದಸರಾ ಮಹೋತ್ಸವವು ನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ದೇಶೀಯತೆ ಯನ್ನು ಸಾರುತ್ತದೆ ಎಂದರು.

ಮಾಸ್ಕ್ - ಸಾಮಾಜಿಕ ಅಂತರ - ಸ್ಯಾನಿಟೈಸರ್ ಬಳಸಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ದೇಶ ಹಾಗೂ ರಾಜ್ಯ ಕೊರೋನಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ.  ವೈದ್ಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ದಾದಿಯರು ಕೊರೋನಾ ಸಂದರ್ಭದಲ್ಲಿ ವಿಶೇಷ ಸೇವೆ ನೀಡಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

ಮಾಸ್ಕ್ - ಸಾಮಾಜಿಕ ಅಂತರ - ಸ್ಯಾನಿಟೈಸರ್ ಅನ್ನು ಬಳಸಿ ಕೊರೋನ ಹೋಗಲಾಡಿಸಲು ಶ್ರಮಿಸಬೇಕು. ಅಲ್ಲದೆ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಪರಿಸ್ಥಿತಿ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಜೊತೆಗೆ ಬೆಂಬಲಕ್ಕೆ ಲಭ್ಯವಿರುವುದಾಗಿ ಹೇಳಿದ್ದರಿಂದ ನೆಮ್ಮದಿ ಉಂಟಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಂಪ್ರದಾಯಕ್ಕಾಗಿ ಸರಳ ದಸರಾ ಆಚರಣೆ

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಕೊರೋನ ಇದ್ದರೂ ದಸರಾ ಮಹೋತ್ಸವದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯುವ ಈ ಬಾರಿಯ ದಸರಾ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಟಿ.ವಿ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ನೇರಪ್ರಸಾರ ವೀಕ್ಷಿಸಬೇಕು ಸಚಿವರು ಮನವಿ ಮಾಡಿದರು.  

ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಅರಮನೆಗಳಿಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಕ್ರಮವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶವನ್ನು ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಮಾಸ್ಕ್ ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶಾವಕಾಂ ನೀಡಲು ಸೂಚನೆ ನೀಡಿದ್ದಾರೆಂದು ಸಚಿವ ಸೋಮಶೇಖರ್ ತಿಳಿಸಿದರು.

ಕೊರೋನ ಯೋಧರಿಗೆ ಸನ್ಮಾನ

ಇದೇ ಸಂದರ್ಭ ಕೊರೋನ ಯೋಧರಾದ ಮೈಸೂರಿನ ಪೌರ ಕಾರ್ಮಿಕ ಮಹಿಳೆ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತ ಅಯ್ಯೂಬ್ ಅಹ್ಮದ್ ಅವರನ್ನು ಆಯಾ ಕ್ಷೇತ್ರದ ಪ್ರತಿನಿಧಿಗಳನ್ನಾಗಿ ಸನ್ಮಾನಿಸಲಾಯಿತು.

ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ರಾಮದಾಸ್, ನಾಗೇಂದ್ರ, ಹರ್ಷವರ್ಧನ್, ಮಹೇಶ್, ನಿರಂಜನ್, ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ  ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News