ಕಾರು-ಬಸ್ ಮುಖಾಮುಖಿ ಢಿಕ್ಕಿ: 9 ಮಂದಿ ಮೃತ್ಯು, 30 ಜನರಿಗೆ ಗಾಯ

Update: 2020-10-17 17:15 GMT

ಪಿಲಿಭಿಟ್(ಉತ್ತರಪ್ರದೇಶ), ಅ. 17: ಉತ್ತರಪ್ರದೇಶದ ಪಿಲಿಭಿಟ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರು ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಪ್ರದೇಶದ ಪಿಲಿಭಿಟ್ ಜಿಲ್ಲೆಯ ಪುರಾಣ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ‘‘ಜಿಲ್ಲೆಯ ಪುರಾಣ್‌ಪುರ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಕಾರು ಹಾಗೂ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ 9 ಮಂದಿ ಮೃತಪಟ್ಟಿದ್ದಾರೆ ಹಾಗೂ 30 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಬಸ್ ಹಾಗೂ ಕಾರಿನ ಪ್ರಯಾಣಿಕರು ಸೇರಿದ್ದಾರೆ’’ ಎಂದು ಪಿಲಿಭಿಟ್ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಯಾದವ್ ಹೇಳಿದ್ದಾರೆ.

‘‘ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ ಲಕ್ನೋದಿಂದ ಪಿಲಿಭಿಟ್‌ಗೆ ತೆರಳುತ್ತಿತ್ತು. ಬಸ್‌ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ಪಿಲಿಭಿಟ್ ಹಾಗೂ ಸಮೀಪದ ಪ್ರದೇಶದವರು’’ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News