ಮನೀಶ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳಿಗೆ ಗುಂಡೇಟು

Update: 2020-10-17 17:56 GMT

ಬೆಂಗಳೂರು, ಅ.17: ಪಬ್‍ವೊಂದರ ಮಾಲಕ ಮನೀಶ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಇಲ್ಲಿನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಶಶಿಕಿರಣ್(45), ಗಣೇಶ್(39), ನಿತ್ಯಾ(29) ಮತ್ತು ಅಕ್ಷಯ್(32) ಎಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಎಂಜಿ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನೀಶ್ ಶೆಟ್ಟಿ ಮೇಲೆ ಹಲ್ಲೆ ನಡೆಸಿ, ತದನಂತರ, ಗುಂಡು ಹಾರಿಸಿ ಕೊಲೆಗೈದು ಪರಾರಿಯಾಗಿದ್ದರು.

ಪ್ರಕರಣದ ಬಳಿಕ ಹಂತಕರ ಬಂಧನಕ್ಕಾಗಿ 9 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಶನಿವಾರ ಇಲ್ಲಿನ ಶಾಂತಿನಗರದ ರುದ್ರಭೂಮಿ ವ್ಯಾಪ್ತಿಯಲ್ಲಿ ಆರೋಪಿಗಳು ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ತನಿಖಾಧಿಕಾರಿಗಳು ವಶಕ್ಕೆ ಪಡೆಯಲು ಮುಂದಾದ ವೇಳೆ ಶಶಿಕಿರಣ್ ಹಾಗೂ ಅಕ್ಷಯ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಶಶಿಕಿರಣ್, ಅಕ್ಷಯ್ ಮೇಲೆ ಗುಂಡು ಹಾರಿಸಿದ್ದಾರೆ.ಈ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ತಾಗಿ ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News