ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಲ್ಲಾ ಸಚಿವರು ಹೋಗಬೇಕು: ಎಚ್.ವಿಶ್ವನಾಥ್

Update: 2020-10-18 17:19 GMT

ಮೈಸೂರು,ಅ.18: ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದ ಸಚಿವರಷ್ಟೇ ಹೋದರೆ ಸಾಲದು. ಸಂಪುಟದ ಎಲ್ಲಾ ಸಚಿವರು ತೆರಳಿ ಅಲ್ಲಿನ ಜನರಿಗೆ ಧೈರ್ಯ ತುಂಬಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸಲಹೆ ನೀಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್, ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಗಮನಿಸಿದರೆ ಕರುಳು ಹಿಂಡಿ ಬರುತ್ತದೆ. ಇಂತಹ ಸಂದರ್ಭಗಳಲ್ಲಿ ಬೇರೆ-ಬೇರೆ ಇಲಾಖಾ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಅಲ್ಲಿಗೆ ಕಳುಹಿಸಿ ತುರ್ತು ಕೆಲಸ ಮಾಡಿಸಬೇಕು ಎಂದರು.

ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ನಾವು ಆಡಳಿತ ಮಾಡಿ ತೋರಿಸುತ್ತೇವೆ ಎಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎಂದು ಜನರಿಗೆ ಗೊತ್ತಾಗಿದೆ. ಪ್ರತಿಪಕ್ಷ ನಾಯಕನಾಗಿ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಲಿ ಎಂದು ಕಿಡಿಕಾರಿದರು.

ಮೈಸೂರಿನ ಪ್ರವಾಸಿ ತಾಣಗಳಲ್ಲಿ ವಿಧಿಸಿದ್ದ ನಿರ್ಬಂಧ ತೆರೆವುಗೊಳಿಸಿರುವುದರಿಂದ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ ಎಂದು ಇದೇ ವೇಳೆ ಎಚ್.ವಿಶ್ವನಾಥ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News