ಬೆಳಗಾವಿಯಲ್ಲಿ ಅತಿವೃಷ್ಟಿ ಹಾನಿ ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಎಲ್.ಕೆ.ಅತೀಕ್ ಸೂಚನೆ

Update: 2020-10-20 16:45 GMT

ಬೆಳಗಾವಿ, ಅ.20: ಜಿಲ್ಲೆಯಲ್ಲಿ ಪದೇ ಪದೆ ಪ್ರವಾಹ ಭೀತಿ ಎದುರಾಗುತ್ತಿರುವುದರಿಂದ ಇದುವರೆಗೆ ಪ್ರವಾಹ ಮತ್ತು ಅತಿವೃಷ್ಟಿಯಿಂದ ಆಗಿರುವ ಮೂಲಸೌಕರ್ಯಗಳು ಮತ್ತಿತರ ಹಾನಿಯನ್ನು ಸರಿಪಡಿಸಲು ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಮನೆ ನಿರ್ಮಾಣಕ್ಕೆ ವಿವಿಧ ಕಂತಿನಲ್ಲಿ ಪರಿಹಾರ ಪಡೆದುಕೊಂಡು ನಿರ್ಮಾಣ ಕಾರ್ಯ ಆರಂಭಿಸದಿರುವವರಿಗೆ ನೋಟಿಸ್ ನೀಡಿ ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಳೆ ಮತ್ತು ಕೋವಿಡ್ ಕಾರಣಕ್ಕೆ ಅನೇಕ ಗ್ರಾಮೀಣ ಕುಡಿಯುವ ನೀರು ಯೋಜನೆಗಳು ವಿಳಂಬವಾಗಿವೆ. ಆದುದರಿಂದ, ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಅವಧಿ ಕಾರ್ಯನಿರ್ವಹಿಸುವ ಮೂಲಕ ತಕ್ಷಣವೇ ಟೆಂಡರ್ ಕರೆದು ನಿಗದಿತ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಬೇಕು. ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ನಲ್ಲಿ ಸಂಪರ್ಕ ಒದಗಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡ ಅತೀಕ್, ಹೆರಿಗೆಗೆ ಸರಕಾರಿ ಆಸ್ಪತ್ರೆಗೆ ಬರುವವರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಗ್ರಾಮೀಣ ಪ್ರದೇಶಗಳಲ್ಲಿ ಇರುವ ಸರಕಾರಿ ಜಮೀನುಗಳನ್ನು ಬಳಸಿಕೊಂಡು ಜನರಿಗೆ ಅಗತ್ಯವಾದ ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.

ಪ್ರತಿವರ್ಷವೂ ಎದುರಾಗುವ ಜಲಕ್ಷಾಮ ನೀಗಿಸಲು ಅಂತರ್ಜಲಮಟ್ಟ ವೃದ್ಧಿಗೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದ ಅವರು, ಮಳೆಯ ಪ್ರಮಾಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ತೆಗೆದುಕೊಂಡ ಕ್ರಮಗಳು, ಬೀಜ-ಗೊಬ್ಬರಗಳ ಲಭ್ಯತೆ, ಮೇವು ದಾಸ್ತಾನು, ರಸ್ತೆ-ಕಟ್ಟಡಗಳು, ಶಾಲಾ ಮತ್ತು ಅಂಗನವಾಡಿ ಕಟ್ಟಡಗಳು ಸೇರಿದಂತೆ ವಿವಿಧ ಮೂಲಸೌಕರ್ಯಗಳ ಹಾನಿ, ವೈದ್ಯಕೀಯ ಸೌಲಭ್ಯಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲೆಯಲ್ಲಿ ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ 1.66 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಕೋವಿಡ್-19 ಪರಿಸ್ಥಿತಿ ಕೂಡ ಕ್ರಮೇಣ ನಿಯಂತ್ರಣಕ್ಕೆ ಬಂದಿದ್ದು, ಆಕ್ಸಿಜನ್ ಬೇಡಿಕೆ ಇಳಿಮುಖವಾಗಿದೆ. ಎಲ್ಲ ಹದಿನಾಲ್ಕು ತಾಲೂಕುಗಳಲ್ಲಿ ಪವಿತ್ರ ವನ ನಿರ್ಮಾಣಕ್ಕೆ ಐದು ಎಕರೆ ಜಮೀನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಾ.ಅಶೋಕ ಕೊಳ್ಳಾ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News