ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮುನಿರತ್ನ ಬೆಂಬಲಿಗರಿಂದ ಹಲ್ಲೆ: ಆರೋಪ

Update: 2020-10-21 11:28 GMT

ಬೆಂಗಳೂರು, ಅ.21: ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ಹಾಗೂ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿ, ಮತದಾರರ ಗುರುತಿನ ಚೀಟಿಯ ಮಾಹಿತಿ ಪುಸ್ತಕ ಹರಿದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ಪರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿ, ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ಮಾಜಿ ಸಂಸದ ಧ್ರುವನಾರಯಣ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರ ಕಾರ್ಯದ ಬಳಿ ತೆರಳಿ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ಖಂಡಿಸಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ನಾಯಕರು ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಹಿರಿಯ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧ್ರುವನಾರಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಬೆದರಿಕೆಗೆ ಬಗ್ಗುವುದಿಲ್ಲ
ಚುನಾವಣಾ ಆಯೋಗ ಮತ್ತು ಪೊಲೀಸ್ ಅಧಿಕಾರಿಗಳು ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು. ಕ್ಷೇತ್ರದಲ್ಲಿ ಗೂಂಡಾಗಿರಿ, ದಬ್ಬಾಳಿಕೆ, ಬೆದರಿಕೆಗೆ ಕಾಂಗ್ರೆಸ್ ಪಕ್ಷ ಮತ್ತು ಕಾರ್ಯಕರ್ತರು ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ. ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಚುನಾವಣೆ ನಡೆಸಬೇಕು'
-ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ

`ಆರ್.ಆರ್.ನಗರ ಕ್ಷೇತ್ರದಲ್ಲಿ ಗಲಭೆ, ಗದ್ದಲ ಸೃಷ್ಟಿಸಿ ಉಪಚುನಾವಣೆ ಶಾಂತಿಯುತವಾಗಿ ನಡೆಯದಂತೆ ಮಾಡಲು ಕ್ಷೇತ್ರದ ಹೊರಗಿನಿಂದ ಮೂರು-ನಾಲ್ಕು ಸಾವಿರ ಜನರನ್ನು ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ. ಬಿಜೆಪಿಯವರು ಹಲ್ಲೆ ನಡೆಸಿ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಹೊರಿಸಿ ಅನುಕಂಪ ಪಡೆಯುವ ಯತ್ನ ಮಾಡುತ್ತಿದ್ದಾರೆ. ನ್ಯಾಯಯುತ ಚುನಾವಣೆ ನಡೆಸಬೇಕೆಂಬುದು ನಮ್ಮ ಉದ್ದೇಶವಾಗಿದೆ'

-ಮುನಿರತ್ನ, ಬಿಜೆಪಿ ಅಭ್ಯರ್ಥಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News