ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಬಿಎಸ್‍ವೈ ನಿರಾಕರಣೆ

Update: 2020-10-21 11:28 GMT

ಬಳ್ಳಾರಿ, ಅ. 21: `ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಹೆಚ್ಚು ದಿನ ಉಳಿಯುವುದಿಲ್ಲ, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ' ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ನಿರಾಕರಿಸಿದ್ದಾರೆ.

ಬುಧವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆಗೆ ತೆರಳುವ ಮುನ್ನ ಜಿಲ್ಲೆಯ ತೋರಣಗಲ್ಲು ಏರ್ ಸ್ಟ್ರಿಪ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿ, ನಿರ್ಗಮಿಸಿದರು. `ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ. ಹೀಗಾಗಿ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದು, ಬಳಿಕ ಕೇಂದ್ರ ಸರಕಾರಕ್ಕೆ ನೆರೆ ನಷ್ಟಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗುವುದು ಎಂದ ಯಡಿಯೂರಪ್ಪ, ಮಳೆ-ಪ್ರವಾಹದಿಂದ ಮನೆ ಕಳೆದುಕೊಂಡವರು, ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದು ಪರಿಹಾರ ನೀಡಲಾಗುವುದು. ಈಗಾಗಲೇ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News