ಡಿಜೆ ಹಳ್ಳಿ ಗಲಭೆ ಪ್ರಕರಣ : ಆರೋಪಿ ನವೀನ್‌ಗೆ ಹೈಕೋರ್ಟ್ ನಿಂದ ಜಾಮೀನು

Update: 2020-10-22 11:00 GMT

ಬೆಂಗಳೂರು, ಅ.22: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ನವೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದು ಕೊಂಡಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು ಆರೋಪಿ ನವೀನ್‌ಗೆ ಜಾಮೀನು ಮಂಜೂರು ಮಾಡಿತು.

ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಳಿಯ ನವೀನ್ ತಾನೂ ಪೋಸ್ಟ್ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿದ್ದಾಗಿ ಒಪ್ಪಿಕೊಂಡಿದ್ದ. ರಾಜಕೀಯವಾಗಿ ನವೀನ್‌ನ ಟಾರ್ಗೇಟ್ ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.

ನವೀನ್ ವಿರುದ್ಧ ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲೂ ಪ್ರಕರಣ ದಾಖಲಾಗಿತ್ತು. ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾರಣಕ್ಕೆ ಈ ಕಾಯ್ದೆಗಳ ಅಡಿ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News