ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕೋರಿ ಪಿಐಎಲ್: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2020-10-23 14:27 GMT

ಬೆಂಗಳೂರು, ಅ.23: ರಾಜ್ಯದ ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿರುವ ಹೈಕೋರ್ಟ್, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದರೂ ಚುನಾವಣೆ ಆಯೋಗ ಚುನಾವಣೆಗಳನ್ನು ನಡೆಸುವ ಸಂಬಂಧ ಯಾವುದೇ ಸೂಕ್ತ ತೀರ್ಮಾನ ಕೈಗೊಳ್ಳಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಅವಧಿ ಮುಗಿದಿರುವ ಗಾ.ಪಂ.ಗಳಿಗೆ ಚುನಾವಣೆ ನಡೆಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸರಕಾರದ ಪರ ವಾದಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಕೊರೋನ ಸೋಂಕು ಹಿನ್ನೆಲೆಯಲ್ಲಿ ಜನರ ಸುರಕ್ಷತೆಗೆ ಗಮನ ನೀಡಿ ಸ್ವಲ್ಪ ಕಾಲಾವಕಾಶ ಕೇಳುತ್ತಿದ್ದೇವೆ ಎಂದು ಈ ಹಿಂದೆ ಹೇಳಿದ್ದನ್ನೇ ಪುನರುಚ್ಚರಿಸಿದರು. ಜತೆಗೆ ಚುನಾವಣಾ ಆಯೋಗ ಸರಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದರು.

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರು ವಾದಿಸಿ, ಈಗಾಗಲೇ ಸರಕಾರ ಹಾಗೂ ಜಿಲ್ಲಾಧಿಕಾರಿಗಳ ಜೊತೆಯೂ ಸಮಾಲೋಚನೆ ನಡೆಸಿ, ಸುರಕ್ಷಿತವಾಗಿ ಚುನಾವಣೆ ನಡೆಸುವ ಸಂಬಂಧ ಎಸ್‍ಓಪಿ ಕೂಡ ಸಿದ್ಧಪಡಿಸಲಾಗಿದೆ. ಸೋಂಕು ಕಡಿಮೆ ಇರುವ ಕಡೆ ಮೊದಲು ಚುನಾವಣೆ ನಡೆಸಲು ಆಯೋಗ ಯೋಜನೆ ರೂಪಿಸಿದೆ ಎಂದರು.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ, ಮಾಜಿ ಅಡ್ವಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ವಾದಿಸಿ, ಸರಕಾರ ಚುನಾವಣೆ ನಡೆಸಲು ಆಯೋಗಕ್ಕೆ ಮುಕ್ತ ಅವಕಾಶ ಕೊಡುತ್ತಿಲ್ಲ. ಅವಧಿ ಮುಗಿದಿರುವ ಗ್ರಾಪಂಗಳಿಗೆ 6 ತಿಂಗಳ ಅವಧಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದ್ದು, ಅವರ ಅವಧಿ ಡಿಸೆಂಬರ್ ಗೆ ಮುಕ್ತಾಯವಾಗಲಿದೆ. ಆ ಬಳಿಕ ಅವಧಿ ವಿಸ್ತರಣೆಗೆ ಅವಕಾಶವಿಲ್ಲ. ಹೀಗಾಗಿ, ನ್ಯಾಯಾಲಯವೇ ಚುನಾವಣೆಗಳನ್ನು ನಡೆಸಲು ಸೂಕ್ತ ನಿರ್ದೇಶನ ನೀಡಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಸರಕಾರಕ್ಕೆ ಚುನಾವಣೆ ನಡೆಸಲು ಇಷ್ಟವಿಲ್ಲವೇ. ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ ಸರಕಾರಕ್ಕೆ ಗ್ರಾಪಂ ಚುನಾವಣೆಗಳನ್ನು ನಡೆಸಲು ಕಷ್ಟವಾಗುತ್ತಿದೆಯೇ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ವಾಸ್ತವವಾಗಿ ಗ್ರಾಪಂ ಚುನಾವಣೆ ನಡೆಸಲು ಸರಕಾರವೇ ಮುಂದೆ ಬರಬೇಕಿತ್ತು. ಆದರೆ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಕೇಳುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅರ್ಜಿದಾರರು ಆಕ್ಷೇಪಣೆಗಳಿದ್ದಲ್ಲಿ ಅ.29ರೊಳಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News